ಡ್ರಗ್ಸ್ ಮಾರಾಟಗಾರರ ವಿರುದ್ಧ ಗೂಂಡಾ ಕಾಯ್ದೆ: ಡಿಸಿಎಂ ಪರಮೇಶ್ವರ

ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಡ್ರಗ್ಸ್ ಹಾವಳಿ ಹೆಚ್ಚಾಗಿದ್ದು, ಇದಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ...
ಜಿ ಪರಮೇಶ್ವರ
ಜಿ ಪರಮೇಶ್ವರ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಡ್ರಗ್ಸ್ ಹಾವಳಿ ಹೆಚ್ಚಾಗಿದ್ದು, ಇದಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ ಅವರು ಶುಕ್ರವಾರ ವಿಧಾನಸಭೆಗೆ ತಿಳಿಸಿದ್ದಾರೆ.
ಇಂದು ವಿಧಾನಸಭೆಯಲ್ಲಿ ಮಾದಕ ವಸ್ತುಗಳಿಗೆ ಯುವಕರು ಬಲಿಯಾಗುತ್ತಿರುವ ವಿಚಾರ ಪ್ರಸ್ತಾಪಿಸಿದ ಬಿಜೆಪಿಯ ಆರ್ ಅಶೋಕ್ ಅವರು, ಬೆಂಗಳೂರಿನಲ್ಲಿ ಡ್ರಗ್ಸ್ ಹಾವಳಿ ಮಿತಿ ಮೀರುತ್ತಿದೆ. ಹೀಗಾಗಿ ಡ್ರಗ್ಸ್ ಮಾರಾಟ ಮಾಡುವವರ ವಿರುದ್ಧ ಗೂಂಡಾ ಕಾಯ್ದೆ ಅಡಿ ದೂರು ದಾಖಲಿಸಬೇಕು ಎಂದು ಒತ್ತಾಯಿಸಿದರು.
ಇದಕ್ಕೆ ಪೂರಕವಾಗಿ ಬಿಜೆಪಿಯ ಶಾಸಕರಾದ ಸುರೇಶ್ ಕುಮಾರ್, ಅರವಿಂದ ಲಿಂಬಾವಳಿ, ಕಾಂಗ್ರೆಸ್ ನ ಶಾಸಕ ಹ್ಯಾರಿಸ್ ಸೇರಿದಂತೆ ಹಲವರು ರಾಜ್ಯದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಡ್ರಗ್ಸ್ ಹಾವಳಿ ಬಗ್ಗೆ ಕಳವಳ ವ್ಯಕ್ತಪಡಿಸಿ, ಇದನ್ನು ಮಟ್ಟಹಾಕಲು ಸರ್ಕಾರ ದಿಟ್ಟ ಕ್ರಮ ಕೈಗೊಳ್ಳಬೇಕು. ನಾವು ಕೂಡಾ ನಿಮ್ಮ ಜೊತೆ ಕೈಜೋಡಿಸುತ್ತೇವೆ ಎಂದು ಸರ್ಕಾರಕ್ಕೆ ವಿನಂತಿ ಮಾಡಿಕೊಂಡರು.
ಈ ವೇಳೆ ನನ್ನ ಮಗನೂ ಡ್ರಗ್ಸ್ ಅಡಿಕ್ಟ್ ಆಗಿದ್ದ ಎಂದ ಬಿಜೆಪಿ ಶಾಸಕ ಕಳಕಪ್ಪ ಬಂಡಿ ಅವರು, ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದ ನನ್ನ ಮಗ ಒಂದೇ ವರ್ಷದಲ್ಲಿ ಡ್ರಗ್ಸ್ ವ್ಯಸನಿ ಆಗಿಬಿಟ್ಟಿದ್ದ. ಕಾಲೇಜಿಗೆ ಹೋಗುತ್ತಿರಲಿಲ್ಲ, ನಮಗೆ ಗೊತ್ತಾಗಲು ಆರು ತಿಂಗಳು ಬೇಕಾಯಿತು. ಇದೊಂದು ದೊಡ್ಡ ಜಾಲ. ಶ್ರೀಮಂತರ ಮಕ್ಕಳನ್ನೇ ಗುರಿಯಾಗಿರಿಸಿ ಈಶಾನ್ಯ ರಾಜ್ಯದವರು ಡ್ರಗ್ಸ್ ಸರಬರಾಜು ಮಾಡುತ್ತಿದ್ದಾರೆ. ಡ್ರಗ್ಸ್ ಚಟದಿಂದ ನನ್ನ ಮಗನನ್ನು ಹೊರತರಲು ಪಟ್ಟ ಕಷ್ಟ ಅಷ್ಟಿಷ್ಟಲ್ಲ ಎಂದು ತಮ್ಮ ಮಗನ ಉದಾಹರಣೆಯನ್ನೇ ಸದನದ ಮುಂದಿಟ್ಟಿದ್ದರು.
ಚರ್ಚೆ ಬಳಿಕ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ಡ್ರಗ್ಸ್ ಮಾಫಿಯಾವನ್ನು ಮಟ್ಟ ಹಾಕಲು ರಾಜ್ಯ ಸರ್ಕಾರ ಬದ್ಧವಾಗಿದೆ. ಡ್ರಗ್ಸ್ ಮಾರಾಟ ಮಾಡುವವರ ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com