ಬೆಂಗಳೂರು: ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯ ನೀಡಬೇಕೆಂಬ ಬೇಡಿಕೆಯನ್ನು ಸಿಎಂ ಕುಮಾರ ಸ್ವಾಮಿ ತಳ್ಳಿಹಾಕಿದ್ದಾರೆ.
ಜೆಡಿಎಸ್ ಕಚೇರಿಯಲ್ಲಿ ಪಕ್ಷದ ಮುಖಂಡರ ಸಭೆ ಬಳಿಕ ಮಾತನಾಡಿದ ಅವರು, ''ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ನಾವಂತೂ ಚುನಾವಣಾ ಪೂರ್ವದಲ್ಲಿ ಯಾವುದೇ ಭರವಸೆ ನೀಡಿಲ್ಲ. ಎಲ್ಲದಕ್ಕೂ ಸಬ್ಸಿಡಿ ಕೊಡಿ ಎಂದರೆ ಹೇಗೆ ಸಾಧ್ಯ,'' ಎಂದು ಪ್ರಶ್ನಿಸಿದರು.
ಉಚಿತ ಬಸ್ ಪಾಸ್ ನೀಡುವಂತೆ ಆಗ್ರಹಿಸಿ ವಿದ್ಯಾರ್ಥಿ ಸಂಘಟನೆಗಳ ಹೋರಾಟ ಮುಂದುವರಿಸಿದ್ದಾರೆ. ಆದರೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಅಸಾಧ್ಯ ಎಂಬ ಇಂಗಿತವನ್ನು ಪರೋಕ್ಷವಾಗಿ ಹೇಳಿದ್ದಾರೆ.
ರಾಜ್ಯಾದ್ಯಂತ ಸುಮಾರು 500 ಕಾಲೇಜುಗಳ 10 ಸಾವಿರ ವಿದ್ಯಾರ್ಥಿಗಳು ಹಾಜರಾತಿಯನ್ನು ನಿರ್ಲಕ್ಷ್ಯಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿದ್ದರೂ ಕೆಲವು ಕಾಲೇಜುಗಳಲ್ಲಿ ತರಗತಿ ನಡೆಸಲಾಯಿತು.
ಸಿದ್ದರಾಮಯ್ಯ ನೇತೃತ್ವದ ಸರ್ಕಾರ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು 836 ಕೋಟಿ ರು. ಹಣ ನೀಡಿತ್ತು.