ಬೆಂಗಳೂರು :ಪಾರದರ್ಶಕವಾಗಿ ರೈತರ ಸಾಲಮನ್ನಾ ಯೋಜನೆ ಅನುಷ್ಠಾನಗೊಳಿಸುವಂತೆ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅಧಿಕಾರಿಗಳಿಗೆ ಹೇಳಿದ್ದಾರೆ.
ವಿಧಾನಸೌಧದಲ್ಲಿಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, 49 ಸಾವಿರ ಕೋಟಿ ರೂಪಾಯಿ ರೈತರ ಸಾಲ ಮನ್ನಾ ಮಾಡಲು ರಾಜ್ಯಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಮಾರ್ಗದರ್ಶಿ ಸೂತ್ರಗಳನ್ನು ಶೀಘ್ರದಲ್ಲಿ ಸರ್ಕಾರ ಹೊರಡಿಸಲಿದೆ ಎಂದರು.
ಜುಲೈ 5 ರಂದು 2018-19 ಸಾಲಿನ ಆಯವ್ಯಯ ಮಂಡಿಸಿದ್ದ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸುಮಾರು 34 ಸಾವಿರ ಕೋಟಿ ರೂಪಾಯಿ ರೈತರ ಸಾಲಮನ್ನಾ ಮಾಡುವುದಾಗಿ ಘೋಷಣೆ ಮಾಡಿದ್ದರು. ಇದರಿಂದಾಗಿ 2 ಲಕ್ಷಕ್ಕಿಂತಲೂ ಕಡಿಮೆ ಸಾಲ ಹೊಂದಿರುವ ರೈತರು ಫಲಾನುಭವಿಗಳಾಗಿದ್ದರು.
ಈ ಬಾರಿ ಜೆಡಿಎಸ್ ಅಧಿಕಾರಕ್ಕೆ ಬಂದ 24 ನಾಲ್ಕು ಗಂಟೆಗಳಲ್ಲಿ ರೈತರು ಸಹಕಾರಿ ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಹೊಂದಿರುವ ಸಾಲ ಮನ್ನಾ ಮಾಡುವುದಾಗಿ ಕುಮಾರಸ್ವಾಮಿ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದರು.
ಆದರೆ, ರೈತರ ಪೂರ್ಣ ಸಾಲಮನ್ನಾ ಯೋಜನೆಗಾಗಿ ಆಗ್ರಹಿಸಿ ಪ್ರತಿಪಕ್ಷಗಳು ಹಾಗೂ ವಿವಿಧ ರೈತ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಹಿನ್ನೆಲೆಯಲ್ಲಿ ಮತ್ತೊಂದು ಘೋಷಣೆ ಹೊರಡಿಸಿದ ಕುಮಾರಸ್ವಾಮಿ ಒಟ್ಟಾರೇ, 49 ಸಾವಿರ ಕೋಟಿ ರೂಪಾಯಿ ರೈತರ ಸಾಲಮನ್ನಾ ಮಾಡುವುದಾಗಿ ಹೇಳಿಕೆ ನೀಡಿದ್ದರು. ಈ ಸಂಬಂಧ ಶೀಘ್ರದಲ್ಲಿಯೇ ಆದೇಶ ಹೊರಡಿಸುವುದಾಗಿ ಕುಮಾರಸ್ವಾಮಿ ತಿಳಿಸಿದ್ದಾರೆ.
Advertisement