ಬೆಂಗಳೂರು: ಸಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಸಂಬಂಧ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಜೆಡಿಎಸ್ ವರಿಷ್ಠ ಹೆಚ್. ಡಿ. ದೇವೇಗೌಡರು ಪೋನ್ ಮೂಲಕ ಇಂದು ಮಾತುಕತೆ ನಡೆಸಿದ್ದಾರೆ.
ಸಂಪುಟ ರಚನೆ, ಖಾತೆ ಹಂಚಿಕೆ, ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಮೊದಲಾದ ವಿಷಯಗಳ ಕುರಿತಂತೆ ಉಭಯ ನಾಯಕರು ಚರ್ಚೆ ನಡೆಸಿದ್ದು, ಎಲ್ಲವೂ ಅಂತಿಮಗೊಂಡಿದೆ ಎಂದು ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಡ್ಯಾನಿಶ್ ಆಲಿ ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ.
ರಾಹುಲ್ ಗಾಂಧಿ ಹಾಗೂ ಸೋನಿಯಾಗಾಂಧಿ ಆರೋಗ್ಯ ತಪಾಸಣೆಗಾಗಿ ಅಮೆರಿಕಾದಲ್ಲಿದ್ದು, ಅಧಿಕಾರ ಹಂಚಿಕೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ , ಕಾಂಗ್ರೆಸ್ ಪಕ್ಷದ ನಾಯಕರೊಂದಿಗೆ ನಿನ್ನೆಯೇ ಪೋನ್ ನಲ್ಲಿ ಮಾತುಕತೆ ನಡೆಸಿದ್ದಾರೆ ಎಂದು ಅವರು ಹೇಳಿದ್ದಾರೆ.
ಪೂರ್ವ ನಿಗದಿತ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ರಾಜ್ಯಪಾಲ ವಜೂಬಾಯಿ ವಾಲಾ ಜೂನ್ 5 ರವರೆಗೂ ಬೆಂಗಳೂರಿನಲ್ಲಿ ಇರುವುದಿಲ್ಲ. ಅವರು ಅಂದು ರಾತ್ರಿ ನಗರಕ್ಕೆ ವಾಪಾಸ್ಸಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಜೂನ್ 5 ರ ನಂತರ ಸಚಿವರ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದ್ದಾರೆ.
ದೆಹಲಿಯಲ್ಲಿ ನಿನ್ನೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ನಡುವೆ ಐದು ಸುತ್ತಿನ ಮಾತುಕತೆ ನಡೆದಿದ್ದು, ಹಣಕಾಸು ಇಲಾಖೆಯನ್ನು ಜೆಡಿಎಸ್ ಪಡೆದುಕೊಳ್ಳುವಲ್ಲಿ ಯಶಸ್ವಿಯಾಯಿತು ಎಂದು ಅವರು ತಿಳಿಸಿದ್ದಾರೆ.
Advertisement