ರಾಜ್ಯ
ಜೂ.7ಕ್ಕೆ ಬಾದಾಮಿಗೆ ಮಾಜಿ ಸಿಎಂ ಸಿದ್ದರಾಮಯ್ಯ
ಬಾದಾಮಿ ಕ್ಷೇತ್ರದ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂನ್ 7ಕ್ಕೆ ಬಾದಾಮಿ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆಂದು ಹೇಳಲಾಗುತ್ತಿದೆ...
ಬಾಗಲಕೋಟೆ: ಬಾದಾಮಿ ಕ್ಷೇತ್ರದ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂನ್ 7ಕ್ಕೆ ಬಾದಾಮಿ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆಂದು ಹೇಳಲಾಗುತ್ತಿದೆ.
ಬಾದಾಮಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಸಿದ್ದರಾಮಯ್ಯ ಅವರಿಗೆ ಈ ವರೆಗೂ ಕ್ಷೇತ್ರಕ್ಕೆ ಭೇಟಿ ನೀಡಲು ಸಾಧ್ಯವಾಗಿರಲಿಲ್ಲ.
ಮೇ.15ರಂದು ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಂಡಾಗ ಸಿದ್ದರಾಮಯ್ಯ ಬೆಂಗಳೂರು ನಗರದಲ್ಲಿದ್ದರು. ಮಾಧ್ಯಮಗಳ ಮೂಲಕವೇ ಬಾದಾಮಿ ಕ್ಷೇತ್ರದ ಮತದಾರರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದರು.
ಚುನಾವಣೆ ಫಲಿತಾಂಶದ ವೇಳೆ ವಿಧಾನಸಭೆ ಅತಂತ್ರ ಸ್ಥಿತಿ ಹಾಗೂ ರಾಜಕೀಯ ಕ್ಷಿಪ್ರ ಬೆಳವಣಿಗೆ ಎದುರಾಗಿದ್ದ ಹಿನ್ನಲೆಯಲ್ಲಿ ಬಾದಾಮಿ ಕ್ಷೇತ್ರಕ್ಕೆ ಭೇಟಿ ನೀಡಲು ಸಾಧವಾಗಿರಲಿಲ್ಲ. ಇದಲ್ಲದೆ. ಇದೀಗ ಸಿದ್ದರಾಮಯ್ಯ ಅವರ ಮೇಲೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿರುವುದರಿಂದ ಜವಾಬ್ದಾರಿ ಕೂಡ ಹೆಚ್ಚಾಗಿದೆ.
ಸಂಪುಟ ವಿಸ್ತರಣೆ ಕುರಿತಂತೆ ಖಾತೆ ಹಂಚಿಕೆ ಕುರಿತು ಕೆಲ ಸಮಸ್ಯೆಗಳು ಎದುರಾಗಿದ್ದು, ಸಂಪುಟ ವಿಸ್ತರಣೆ ಬಳಿಕ ಸಿದ್ದರಾಮಯ್ಯ ಹಾಗೂ ಇನ್ನಿತರೆ ಕಾಂಗ್ರೆಸ್ ನಾಯಕರು ತಮ್ಮ ತಮ್ಮ ಕ್ಷೇತ್ರಗಳಿಗೆ ಭೇಟಿ ನೀಡಲಿದ್ದಾರೆ. ಬಾದಾಮಿ ಕ್ಷೇತ್ರದ ಮತದಾರರಿಗೆ ಧನ್ಯವಾದ ಹೇಳುವ ಸಲುವಾಗಿ ಸಿದ್ದರಾಮಯ್ಯ ಅವರು ಜೂ.7 ಕ್ಕೆ ಬಾದಾಮಿ ಕ್ಷೇತ್ರದಲ್ಲಿರುವ ಪಂಚಾಯತ್ ಮುಖ್ಯ ಕಚೇರಿಗೆ ಭೇಟಿ ನೀಡಲಿದ್ದಾರೆಂದು ತಿಳಿದುಬಂದಿದೆ.