ರಸ್ತೆ ರಿಪೇರಿಗೆ ಪ್ರತೀ ಕಿಮೀಗೆ ರೂ.20,000-25,000: ಹೆಚ್.ಡಿ.ರೇವಣ್ಣ

ರಾಜ್ಯಾದ್ಯಂತ ಮಳೆ ತೀವ್ರಗೊಂಡಿರುವ ಹಿನ್ನಲೆಯಲ್ಲಿ ರಾಜ್ಯ ಹೆದ್ದಾರಿ ಹಾಗೂ ಜಿಲ್ಲಾ ರಸ್ತೆಗಳು ಗುಂಡಿಮಯವಾಗುವ ಸಾಧ್ಯತೆಗಳಿದ್ದು, ಈ ಹಿನ್ನಲೆಯಲ್ಲಿ ಹೆದ್ದಾರಿಗಳ ದುರಸ್ತಿಗಾಗಿ ವಾರದೊಳಗೆ ಪ್ರತೀ ಕಿಮೀಗೆ ರೂ.20 ಸಾವಿರ ಅನುದಾನ...
ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ
ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ
ಬೆಂಗಳೂರು: ರಾಜ್ಯಾದ್ಯಂತ ಮಳೆ ತೀವ್ರಗೊಂಡಿರುವ ಹಿನ್ನಲೆಯಲ್ಲಿ ರಾಜ್ಯ ಹೆದ್ದಾರಿ ಹಾಗೂ ಜಿಲ್ಲಾ ರಸ್ತೆಗಳು ಗುಂಡಿಮಯವಾಗುವ ಸಾಧ್ಯತೆಗಳಿದ್ದು, ಈ ಹಿನ್ನಲೆಯಲ್ಲಿ ಹೆದ್ದಾರಿಗಳ ದುರಸ್ತಿಗಾಗಿ ವಾರದೊಳಗೆ ಪ್ರತೀ ಕಿಮೀಗೆ ರೂ.20 ಸಾವಿರ ಅನುದಾನ ಬಿಡುಗಡೆ ಮಾಡುವಂತೆ ಆದೇಶಿಸಲಾಗಿದೆ ಎಂದು ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಅವರು ಗುರುವಾರ ಹೇಳಿದ್ದಾರೆ. 
ನಿನ್ನೆಯಷ್ಟೇ ವಿಧಾನಸೌಧದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಳೆ ಹಿನ್ನಲೆಯಲ್ಲಿ ರಸ್ತೆಗಳು ಹಾಳಾಗಿರುವ ಹಲವು ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಂಗಳೂರು, ಉಡುಪಿ, ಗದಗ, ಹುಬ್ಬಳ್ಳಿ, ವಿಜಯಪುರ, ಬಾಗಲಕೋಟೆ, ಹಾವೇರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಪ್ರವಾಸ ಮಾಡಿದ್ದೇನೆ. ಕರಾವಳಿ ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆಯಿಂದಾಗಿ ರಸ್ತೆಗಳೂ ಹಾಳಾಗಿವೆ. ಬಹುತೇಕ ಕಡೆ ರಸ್ತೆಗಳು ಗುಂಡಿಮಯಗೊಂಡಿವೆ. ಇವುಗಳನ್ನು ತಾತ್ಕಾಲಿಕವಾಗಿ ಮುಚ್ಚಲು ಪ್ರತೀ ಕಿ.ಮೀಗೆ ರೂ.20 ಸಾವಿರದಿಂದ 25 ಸಾವಿರ ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. 
ಮಳೆ ಅಂತ್ಯಗೊಂಡ ಬಳಿಕ ರಸ್ತೆಗಳಿಗೆ ಡಾಂಬರೀಕರಣ ಮಾಡಲಾಗುತ್ತದೆ. ಮಳೆಯಿಂದಾಗಿ ಕೆಲವು ಕಡೆ ಸೇತುವೆಗಳು ತುಂಬಿ ಹರಿಯುತ್ತಿದ್ದು, ಸಾರ್ವಜನಿಕರಿಗೆ ಸೇತುವೆ ಬಗ್ಗೆ ನಿಖರ ಮಾಹಿತಿ ನೀಡಲು ಸೇತುವೆ ಬಳಿ ಸಿಬ್ಬಂದಿಯನ್ನು ನಿಯೋಜಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು. 
ಮೈಸೂರು-ಬೆಂಗಳೂರಿನ ನಡುವಿನ 8 ಪಥದ ರಸ್ತೆ ನಿರ್ಮಾಣಕ್ಕೆ ಈಗಾಗಲೇ ಟೆಂಡರ್ ಆಗಿದೆ. ಈ ಮಾರ್ಗದಲ್ಲಿ ವಿದ್ಯುತ್ ಲೇನ್, ಅರಣ್ಯ ಪ್ರದೇಶ ಸೇರಿದಂತೆ ವಿವಿಧ ಸಮಸ್ಯೆಗಳಿವೆ. ಅದನ್ನು ಬಗೆಹರಿಸಿ ತ್ವರಿತವಾಗಿ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದಿದ್ದಾರೆ. 
ಹುಬ್ಬಳ್ಳಿ-ಧಾರವಾಡ ಬಿಆರ್'ಟಿ ಯೋಜನೆ 7-8 ವರ್ಷಗಳಿಂದ ನೆನೆಗುದಿಗೆ ಬಿದ್ದಿದೆ. ಈ ಯೋಜನೆ ಶೀಘ್ರ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಿಗಂದೂರಿಗೆ ತೆರಳಲು ಶರಾವತಿ ಹಿನ್ನೀರಿನಲ್ಲಿ ರೂ.650 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಾಣ ಕಾಮಗಾರಿ ಆರಂಭಿಸಲು ಸಿದ್ಧತೆ ನಡೆಸಲಾಗಿದೆ. ಮಡಿಕೇರಿ ಹಾಗೂ ಕೇರಳದ ತಲಶ್ಶೇರಿ ನಡುವೆ ಸಂಪರ್ಕ ಕಡಿದು ಹೋಗಿದ್ದು, 15 ದಿನಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಿದ್ದೇನೆಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com