ಬೆಂಗಳೂರು: ಐಟಿ ಸಿಟಿ ಬೆಂಗಳೂರು ಶೀಘ್ರದಲ್ಲಿಯೇ ಗಾರ್ಮೆಂಟ್ ವಿಶ್ವವಿದ್ಯಾಲಯ ಪಡೆಯಲಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಅನಂತ್ ಕುಮಾರ್ ಹೇಳಿದ್ದಾರೆ.
ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಆಯೋಜಿಸಿದ್ದ RALLYಯಲ್ಲಿ ಮಾತನಾಡಿದ ಅವರು, ಬೊಮ್ಮನಹಳ್ಳಿಯಲ್ಲಿ ಹಲವು ಸಿದ್ಧ ಉಡುಪು ತಯಾರಿಕಾ ಕಾರ್ಖಾನೆಗಳಿದ್ದು, ಅಪಾರ ಪ್ರಮಾಣದ ಮಹಿಳೆಯರು ಉದ್ಯೋಗ ಮಾಡುತ್ತಿದ್ದಾರೆ. ಇಲ್ಲಿ ಗಾರ್ಮೆಂಟ್ ವಿಶ್ವವಿದ್ಯಾಲಯ ಸ್ಥಾಪಿಸುವ ಪ್ರಸ್ತಾವಕ್ಕೆ ಜವಳಿ ಖಾತೆ ಸಚಿವ ಸ್ಮೃತಿ ಇರಾನಿ ಅನುಮೋದನೆ ಸೂಚಿಸಿದ್ದು, ಶೀಘ್ರದಲ್ಲಿ ಈ ವಿಶ್ವವಿದ್ಯಾಲಯ ಸ್ಥಾಪಿಸಲಾಗುವುದು ಎಂದು ತಿಳಿಸಿದರು.
ಸಚಿವೆ ಸ್ಮೃತಿ ಇರಾನಿ ಮಾತನಾಡಿ, ಗಾರ್ಮೆಂಟ್ಸ್ ನೌಕರರ ಕಲ್ಯಾಣಕ್ಕಾಗಿ ಕೇಂದ್ರಸರ್ಕಾರ 6 ಸಾವಿರ ಕೋಟಿ ರೂ. ಮೀಸಲಿಟ್ಟಿದೆ. ಮಹಿಳಾ ನೌಕರರಿಗೆ ಕಿರುಕುಳ ತಪ್ಪಿಸುವ ನಿಟ್ಟಿನಲ್ಲಿ ಅಂತರಿಕ ದೂರು ಸಮಿತಿ ರಚಿಸುವಂತೆ ಎಲ್ಲಾ ಗಾರ್ಮೆಂಟ್ ಮಾಲೀಕರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ ಅವರು, ಕಾಂಗ್ರೆಸ್ ನೇತೃತ್ವದಲ್ಲಿ ರಾಜ್ಯದಲ್ಲಿ ಭದ್ರತೆ ಇಲ್ಲದಂತಾಗಿದೆ ಎಂದು ಟೀಕಿಸಿದರು.
Advertisement