ಬೆಂಗಳೂರು: 2009ರ ಮಂಗಳೂರು ಪಬ್ ದಾಳಿ ಪ್ರಕರಣದ ಎಲ್ಲಾ ಆರೋಪಿಗಳನ್ನು ಸೆಷನ್ಸ್ ಕೋರ್ಟ್ ಖುಲಾಸೆಗೊಳಿಸಿದ್ದು, ರಾಜ್ಯ ಕಾನೂನು ತಂಡದೊಂದಿಗೆ ಚರ್ಚಿಸಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ಗುರುವಾರ ಹೇಳಿದ್ದಾರೆ.
ನಮ್ಮ ಅಡ್ವೋಕೇಟ್ ಜನರಲ್ ಸೇರಿದಂತೆ ಕಾನೂನು ತಂಡದೊಂದಿಗೆ ಚರ್ಚಿಸಿ ಸೆಷನ್ಸ್ ಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವ ಬಗ್ಗೆ ನಿರ್ಧರಿಸಲಾಗುವುದು ಎಂದು ರಾಮಲಿಂಗಾ ರೆಡ್ಡಿ ಅವರು ಇಂದು ವರದಿಗಾರರಿಗೆ ತಿಳಿಸಿದ್ದಾರೆ.
ಇದೇ ವೇಳೆ ವರದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಗೃಹ ಸಚಿವರು, ಪ್ರಮೋದ್ ಮುತಾಲಿಕ್ ಅವರಿಗೆ ಹಿಂದಿನಿಂದಲೂ ಜೀವ ಬೆದರಿಕೆ ಇದೆ. ಹೀಗಾಗಿ ಅವರಿಗೆ ನೀಡಿದ ಪೊಲೀಸ್ ಭದ್ರತೆ ಮುಂದುವರೆಯಲಿದೆ ಎಂದು ಹೇಳಿದ್ದಾರೆ.
ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸೇರಿದಂತೆ ಯಾವ ಆರೋಪಿಗಳ ವಿರುದ್ಧವೂ ಸರಿಯಾದ ಸಾಕ್ಷಾಧಾರಗಳಿಲ್ಲದ ಕಾರಣ ನ್ಯಾಯಾಲಯ ಪ್ರಕರಣದಲ್ಲಿ ಆರೋಪಿಗಳಾಗಿದ್ದ 30 ಮಂದಿಯಲ್ಲಿ 26 ಮಂದಿಯನ್ನು ಆರೋಪಮುಕ್ತರನ್ನಾಗಿ ಮಾಡಿದೆ.
ಪ್ರಕರಣದ ಇನ್ನುಳಿದ ಆರೋಪಿಗಳಲ್ಲಿ ಮೂವರು ಆರೋಪಿಗಳು ವಿದೇಶದಲ್ಲಿ ನೆಲೆಸಿದ್ದರೆ ಇನ್ನೊಬ್ಬರು ಮೃತಪಟ್ಟಿದ್ದಾರೆ.