ರಾಜ್ಯಪಾಲರ ನಿರ್ಧಾರದ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ರಾಮ್ ಜೇಠ್ಮಲಾನಿ ವಾದ ಮಂಡನೆ

ಬಿಜೆಪಿ ಸರ್ಕಾರದ ರಚನೆಗೆ ಅವಕಾಶ ನೀಡಿರುವ ಕರ್ನಾಟಕ ರಾಜ್ಯಪಾಲರ ಆದೇಶದ ಕ್ರಮವನ್ನು ಸುಪ್ರೀಂಕೋರ್ಟ್ ಹಿರಿಯ ವಕೀಲ...
ರಾಮ್ ಜೇಠ್ಮಲಾನಿ
ರಾಮ್ ಜೇಠ್ಮಲಾನಿ

ನವದೆಹಲಿ: ಬಿಜೆಪಿ ಸರ್ಕಾರದ ರಚನೆಗೆ ಅವಕಾಶ ನೀಡಿರುವ ಕರ್ನಾಟಕ ರಾಜ್ಯಪಾಲರ ಆದೇಶದ ಕ್ರಮವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಹಿರಿಯ ವಕೀಲ ರಾಮ್ ಜೇಠ್ಮಲಾನಿ ಸುಪ್ರೀಂಕೋರ್ಟ್ ಅರ್ಜಿ ಸಲ್ಲಿಸಿದ್ದು, ಇದೊಂದು ಸಾಂವಿಧಾನಿಕ   ಅಧಿಕಾರದ ದುರುಪಯೋಗ ಎಂದು ಆರೋಪಿಸಿದ್ದಾರೆ.

ನಾಳೆ ತಮ್ಮ ವಾದವನ್ನು ವಿಭಾಗೀಯ ಪೀಠದ ಮುಂದೆ ಮಂಡಿಸುವಂತೆ  ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಾಧೀಶ  ದೀಪಕ್ ಮಿಶ್ರಾ ನೇತೃತ್ವದ ಪೀಠ, ರಾಮ್ ಜೇಠ್ಮಾಲಾನಿಗೆ ತಿಳಿಸಿದೆ.

ರಾಮ್ ಜೇಠ್ಮಾಲಾನಿ ತುರ್ತು ಅರ್ಜಿ ವಿಚಾರಣೆಗೆ ದೀಪಕ್ ಮಿಶ್ರಾ ನೇತೃತ್ವದ ನ್ಯಾಯಪೀಠ  ಒಪ್ಪಿಗೆ ಸೂಚಿಸಿದ್ದು, ನಾಳೆ ಬೆಳಿಗ್ಗೆ  ನ್ಯಾಯಾಧೀಶ ಎ. ಕೆ. ಸಿಕ್ರಿ ಅವರನ್ನೊಳಗೊಂಡ ಮೂವರು ನ್ಯಾಯಾಧೀಶರ ವಿಶೇಷ ನ್ಯಾಯಪೀಠದ ಮುಂಭಾಗ ವಾದ  ಮಂಡಿಸುವಂತೆ ರಾಮ್ ಜೇಠ್ಮಲಾನಿ ಅವರಿಗೆ ಹೇಳಿದೆ.

ರಾಜ್ಯಪಾಲರ ಆದೇಶ ಸಾಂವಿಧಾನಿಕ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡಂತಾಗಿದೆ. ಸಾಂವಿಧಾನಿಕ ಕಚೇರಿಯನ್ನು ತಮ್ಮ ಕೈಯಲ್ಲಿಟ್ಟುಕೊಂಡಂತೆ ನಿರ್ಧಾರ ಕೈಗೊಳ್ಳಲಾಗಿದ್ದು, ಸಂವಿಧಾನದ ಆಶಯಗಳಿಗೆ ಧಕ್ಕೆ ಉಂಟುಮಾಡಲಾಗಿದೆ  ಎಂದು ಜೇಠ್ಮಲಾನಿ ಆರೋಪಿಸಿದ್ದಾರೆ.

ಯಾವುದೇ ರಾಜಕೀಯ ಪಕ್ಷದ ಪರವಾಗಿ ತಾನೂ ಅರ್ಜಿ ಸಲ್ಲಿಸಿಲ್ಲ, ರಾಜ್ಯಪಾಲರ ನಿರ್ಧಾರ ಸಂವಿಧಾನ ಬಾಹಿರವಾಗಿರುವುದರಿಂದ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

ಈ ಪ್ರಕರಣ ಸಂಬಂಧ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಕ್ಕೆ ತಡೆ ನೀಡುವುದಿಲ್ಲ ಎಂದು ನ್ಯಾಯಾಧೀಶರಾದ ಎಸ್, ಎ, ಬೊಡೆ ಮತ್ತು ಅಶೋಕ್ ಭೂಷಣ್ ಅವರನ್ನೊಳಗೊಂಡ ಸುಪ್ರೀಂಕೋರ್ಟ್ ನ್ಯಾಯಪೀಠ ತಿಳಿಸಿದ್ದು, ಮೇ 15 ರಂದು ನಡೆದ ಚುನಾವಣೆಯ ಫಲಿತಾಂಶ ಹಾಗೂ ಸರ್ಕಾರ ರಚನೆಗೆ ಬಗ್ಗೆಗಿನ ಕಾಗದಗಳನ್ನು   ಯಡಿಯೂರಪ್ಪ ರಾಜ್ಯಪಾಲರಿಗೆ ಸಲ್ಲಿಸುವಂತೆ ಸುಪ್ರೀಂಕೋರ್ಟ್  ಅಟಾರ್ನಿ ಜನರಲ್ ಅವರಿಗೆ ಸೂಚಿಸಿದೆ..

ನಾಳೆ ಬೆಳಿಗ್ಗೆ 10-30ಕ್ಕೆ ಈ ಪ್ರಕರಣದ ವಿಚಾರಣೆ ಸುಪ್ರೀಂಕೋರ್ಟ್ ನಲ್ಲಿ ನಡೆಯಲಿದೆ.

ಹೆಚ್. ಡಿ. ಕುಮಾರಸ್ವಾಮಿ ನೇತೃತ್ವದ ಸರ್ಕಾರ ರಚನೆಗೆ 116 ಶಾಸಕರ ಬಲ ಇದ್ದರೂ  104 ಶಾಸಕರ ಬಲ ಹೊಂದಿರುವ ಬಿಜೆಪಿ ಸರ್ಕಾರ ರಚನೆಗೆ ರಾಜ್ಯಪಾಲರು ಅವಕಾಶ ನೀಡಿರುವುದು ಸಂವಿಧಾನಿಕ ಬಾಹಿರ ಎಂದು ಕಾಂಗ್ರೆಸ್ ಆರೋಪಿಸಿದೆ.

 ಮೇ 12 ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ 104, ಕಾಂಗ್ರೆಸ್ 78, ಜೆಡಿಎಸ್ 38 ಹಾಗೂ ಇತರರು ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com