ಬೆಂಗಳೂರು : ಮತದಾನಕ್ಕೂ ಒಂದು ದಿನ ಮುಂಚಿತವಾಗಿ ರಾಜರಾಜೇಶ್ವರಿ ನಗರದ ಕಾಂಗ್ರೆಸ್ ಮುಖಂಡರೊಬ್ಬರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಳು ದಾಳಿ ನಡೆಸಿದ್ದಾರೆ. ಆದರೆ, ದಾಳಿ ವೇಳೆ ಏನೂ ಸಿಕ್ಕಿಲ್ಲ ಎಂಬ ಮಾಹಿತಿ ತಿಳಿದುಬಂದಿದೆ.
ಮತದಾರರಿಗೆ ಹಣ ಹಂಚಲಾಗುತ್ತಿದೆ ಎಂಬ ಆರೋಪದ ಮೇರೆಗೆ ರಾಜರಾಜೇಶ್ವರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿಗೌಡ ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ. ಮುನಿರತ್ನ ಅವರ ಹೆಸರು ಕೆಡಿಸುವ ಸಲುವಾಗಿ ಬಿಜೆಪಿ ನೀಡಿರುವ ತಪ್ಪು ಮಾಹಿತಿಯ ಪರಿಣಾಮವಾಗಿ ಈ ದಾಳಿ ನಡೆದಿದೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದ್ದಾರೆ.
ಹಣ ಸಿಕ್ಕಿದ್ದರೆ ನೋಟಿಸ್ ನೀಡಬೇಕು, ಬಿಜೆಪಿ ಸುಳ್ಳು ಸುದ್ದಿ ಹಬ್ಬಿಸುವ ಮೂಲಕ ಮತದಾರರ ಮೇಲೆ ಪ್ರಭಾವ ಬೀರಲು ಯತ್ನಿಸುತ್ತಿದೆ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ. ಕೆ. ಸುರೇಶ್ ಆರೋಪಿಸಿದರು.
ರವಿಗೌಡ ಮನೆಯಿಂದ 5 ಕೋಟಿ ಹಣ ವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಬಿಜೆಪಿ ಸುಳ್ಳು ಆರೋಪ ಮಾಡಿದೆ. ಬಿಜೆಪಿ ಚುನಾವಣಾ ಆಯೋಗ ಹಾಗೂ ಆದಾಯ ತೆರಿಗೆ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡಿದೆ ಎಂದು ಅವರು ಆಪಾದಿಸಿದರು.
ಈ ಮಧ್ಯೆ ಸುರೇಶ್ ತುರ್ತು ಸುದ್ದಿಗೋಷ್ಠಿ ನಡೆಸುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.
Advertisement