ಪ್ರಕಟವಾಗದ ರಾಜ್ಯೋತ್ಸವ ಪ್ರಶಸ್ತಿ: ಚುನಾವಣೆ ನೀತಿ ಸಂಹಿತೆ ಅಡ್ಡಿ
ಬೆಂಗಳೂರು: ಪ್ರತಿವರ್ಷ ನವೆಂಬರ್ 1ರಂದು ನೀಡಲಾಗುವ ಪ್ರತಿಷ್ಠಿತ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸಮಾರಂಭ ಮುಂದೂಡಲಾಗಿದೆ. ನಾಡಿದ್ದು ಶನಿವಾರ 5 ಕ್ಷೇತ್ರಗಳಲ್ಲಿ ಉಪ ಚುನಾವಣೆಯಿರುವುದರಿಂದ ನೀತಿ ಸಂಹಿತೆ ಅಡ್ಡಿಯಾಗಿದೆ ಎಂದು ಸರ್ಕಾರ ಹೇಳಿದೆ.
ನಿನ್ನೆ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಭೆ ಜರುಗಿತು. ಸಭೆಯ ನಂತರ ಮಾಹಿತಿ ನೀಡಿದ ಮುಖ್ಯಮಂತ್ರಿ ಕುಮಾರಸ್ವಾಮಿ, ರಾಜ್ಯದಲ್ಲಿ ಕೆಲವು ಲೋಕಸಭೆ ಮತ್ತು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿರುವ ಹಿನ್ನಲೆಯಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮುಂದೂಡಲಾಗಿದೆ.
ಚುನಾವಣಾ ನೀತಿಸಂಹಿತೆ ಮುಗಿದ ನಂತರ ನವೆಂಬರ್ 8ರಂಜು ಪ್ರಶಸ್ತಿ ಪ್ರದಾನ ಸಮಾರಂಭ ಏರ್ಪಡಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಜಯಮಾಲಾ ತಿಳಿಸಿದರು.
ಆದರೆ ಇಂದು ಬೆಳಗ್ಗೆ 9 ಗಂಟೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ 63ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭ ಮತ್ತು ಮಕ್ಕಳ ಮೇಳ ಹಾಗೂ ಕ್ಷೀರಭಾಗ್ಯ ಯೋಜನೆಯಡಿ ವಿಶೇಷ ಶಾಲೆಗಳ ವಿಕಲಚೇತನ ಮಕ್ಕಳಿಗೆ ಹಾಲು ವಿತರಿಸುವ ಕಾರ್ಯಕ್ರಮದ ಉದ್ಘಾಟನೆ ಬೆಂಗಳೂರಿನ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ.
ಕರ್ನಾಟಕ ಏಕೀಕರಣದ ನಂತರ ಇದೇ ಮೊದಲ ಬಾರಿಗೆ ಕರ್ನಾಟಕ ರಾಜ್ಯೋತ್ಸವ ಸಮಾರಂಭ ಮುಂದೂಡಲಾಗಿದೆ. ರಾಜ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಮುಂದೂಡಿಕೆಗೆ ಉಪಚುನಾವಣೆ ನೀತಿ ಸಂಹಿತೆ ಕಾರಣ ಎಂದು ಸರಕಾರ ಸಮಜಾಯಿಷಿ ನೀಡಿದೆಯಾದರೂ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಯಾವುದೇ ನಿರ್ಬಂಧ ವಿಧಿಸಿಲ್ಲ ಎಂದು ಚುನಾವಣೆ ಆಯೋಗ ಸ್ಪಷ್ಟಪಡಿಸಿದೆ.
ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಯೋಗದಿಂದ ಯಾವುದೇ ನಿರ್ಬಂಧ ವಿಧಿಸಿಲ್ಲ. ಈ ಬಗ್ಗೆ ಸರಕಾರದಿಂದ ಸ್ಪಷ್ಟನೆ ಕೋರಲಾಗಿತ್ತು. ನಾಡ ಧ್ವಜಾರೋಹಣ, ರಾಜ್ಯೋತ್ಸವ ಆಚರಣೆಗೆ ಅಡ್ಡಿಯಿಲ್ಲ. ಆದರೆ, ಕಾರ್ಯಕ್ರಮದಲ್ಲಿ ರಾಜಕೀಯ ಭಾಷಣ ಮಾಡಬಾರದು ಎಂದು ಸ್ಪಷ್ಟಪಡಿಸಲಾಗಿತ್ತು. ಆದರೆ, ರಾಜ್ಯೋತ್ಸವ ಪ್ರಶಸ್ತಿ ಪ್ರದಾನಕ್ಕೆ ಸಂಬಂಧಪಟ್ಟಂತೆ ಸರಕಾರ ಇದುವರೆಗೆ ಯಾವುದೇ ಸ್ಪಷ್ಟನೆ ಕೇಳಿರಲಿಲ್ಲ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ