ಬೆಂಗಳೂರು : ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಾಳೆ ಕರೆ ನೀಡಿರುವ ಭಾರತ್ ಬಂದ್ ಗೆ ಜೆಡಿಎಸ್ ಕೂಡಾ ಬೆಂಬಲ ವ್ಯಕ್ತಪಡಿಸಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ನಗರಗಳಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಳ್ಳುವ ಸಾಧ್ಯತೆ ಇದೆ.
ಬೆಳಗ್ಗೆ 6 ರಿಂದ ಸಂಜೆ ಆರು ಗಂಟೆಯವರೆಗೂ ಬಂದ್ ಗೆ ಕರೆ ನೀಡಲಾಗಿದ್ದು, ಕೆಎಸ್ ಆರ್ ಟಿಸಿ ಸಿಬ್ಬಂದಿ ಮತ್ತು ಕಾರ್ಮಿಕರ ಒಕ್ಕೂಟ ಬೆಂಬಲ ವ್ಯಕ್ತಪಡಿಸಿರುವುದರಿಂದ ರಾಜ್ಯಾದಾದ್ಯಂತ ಬಸ್ಸುಗಳ ರಸ್ತೆಗೆ ಇಳಿಯುವುದಿಲ್ಲ. ಹಿಂಸಾಚಾರದಂತಹ ಘಟನೆ ಹಿನ್ನೆಲೆಯಲ್ಲಿ ಬಸ್ ಸೇವೆಯನ್ನು ಸ್ಥಗಿತಗೊಳಿಸುವುದು ಎಂದು ಬಿಎಂಟಿಸಿ ಹಾಗೂ ಕೆಎಸ್ ಆರ್ ಟಿಸಿ ಅಧಿಕೃತವಾಗಿ ಹೇಳಿಕೆ ನೀಡಿವೆ.
ನಮ್ಮ ಮೆಟ್ರೋ ರೈಲು ಸಂಚಾರ ಎಂದಿನಂತೆ ಸಾಗಲಿದೆ. ಆದರೆ, ಒಂದು ವೇಳೆ ಪೊಲೀಸರು ಸಲಹೆ ಮಾಡಿದ್ದರೆ ಬಂದ್ ಮಾಡಲಾಗುವುದು. ಈ ಸಂಬಂಧ ನಾಳೆ ಬೆಳಿಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆದಾಗ್ಯೂ, ಕೆಲ ಆಟೋ ರಿಕ್ಷಾ ಒಕ್ಕೂಟಗಳು ಕಾರ್ಯಾಚರಣೆ ನಡೆಸುವುದಾಗಿ ತಿಳಿಸಿವೆ. ಸಿಲಿಂಡರ್ ಬೆಲೆಯಲ್ಲಿ ಪರಿಣಾಮ ಬೀರಿಲ್ಲ. ಆದ್ದರಿಂದ ಬಂದ್ ಗೆ ಬೆಂಬಲ ನೀಡುವುದಿಲ್ಲ , ಎಂದಿನಂತೆ ಆಟೋಗಳು ಕಾರ್ಯಾಚರಣೆ ನಡೆಸಲಿವೆ ಎಂದು ಆದರ್ಶ ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘದ ಅಧ್ಯಕ್ಷ ಎಂ. ಮಂಜುನಾಥ್ ಹೇಳಿದ್ದಾರೆ.
ರಾಜ್ಯ ಲಾರಿ ಮಾಲೀಕರ ಸಂಘ ಕೂಡಾ ಬಂದ್ ಗೆ ಬೆಂಬಲ ವ್ಯಕ್ತಪಡಿಸಿದೆ. ಡೀಸೆಲ್ ಬೆಲೆ ಯಲ್ಲಿ ಏರಿಕೆ ವಿರೋಧಿಸಿ ಬಂದ್ ನಡೆಯುತ್ತಿರುವುದರಿಂದ ಬಂದ್ ಬೆಂಬಲಿಸುವುದಾಗಿ ರಾಜ್ಯ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಚನ್ನಾರೆಡ್ಡಿ ಹೇಳಿದ್ದಾರೆ.
ಕೆಲ ಖಾಸಗಿ ಶಾಲೆಗಳಿಗೆ ಈಗಾಗಲೇ ರಜೆ ಘೋಷಿಸಲಾಗಿದೆ. ಸರ್ಕಾರ ಶಾಲೆಗಳಿಗೆ ನಾಳೆ ಜಿಲ್ಲಾಧಿಕಾರಿಗಳು ರಜೆ ಘೋಷಿಸುವ ಸಾಧ್ಯತೆ ಇದೆ . ಭಾರತ್ ಬಂದ್ ಕರೆಗೆ ಟ್ಯಾಕ್ಸಿ ಮಾಲೀಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬಂದ್ ನಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದು ಬೆಂಗಳೂರು ಟೂರಿಸ್ಟ್ ಟ್ಯಾಕ್ಸಿ ಮಾಲೀಕರ ಸಂಘದ ಅಧ್ಯಕ್ಷ ಕೆ. ರಾಧಾಕೃಷ್ಣ ಹೊಳ್ಳ ತಿಳಿಸಿದ್ದಾರೆ.
Advertisement