ಕೈ ಬಂಡಾಯ: ಕೇಂದ್ರ ಸಚಿವರ ಭೇಟಿಗಾಗಿ ನವದೆಹಲಿಯತ್ತ ಸಿಎಂ ಕುಮಾರಸ್ವಾಮಿ
ರಾಜ್ಯ ರಾಜಕೀಯದಲ್ಲಾಗುತ್ತಿರುವ ಬೆಳವಣಿಗೆಗಳ ಕುರಿತು ಕೇಂದ್ರ ಸಚಿವರೊಂದಿಗೆ ಚರ್ಚೆ ನಡೆಸುವ ಸಲುವಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಶೀಘ್ರದಲ್ಲಿಯೇ ರಾಜಧಾನಿ ನವದೆಹಲಿಗೆ ಭೇಟಿ ನೀಡಲಿದ್ದಾರೆಂದು ತಿಳಿದುಬಂದಿದೆ...
ಬೆಂಗಳೂರು: ರಾಜ್ಯ ರಾಜಕೀಯದಲ್ಲಾಗುತ್ತಿರುವ ಬೆಳವಣಿಗೆಗಳ ಕುರಿತು ಕೇಂದ್ರ ಸಚಿವರೊಂದಿಗೆ ಚರ್ಚೆ ನಡೆಸುವ ಸಲುವಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಶೀಘ್ರದಲ್ಲಿಯೇ ರಾಜಧಾನಿ ನವದೆಹಲಿಗೆ ಭೇಟಿ ನೀಡಲಿದ್ದಾರೆಂದು ತಿಳಿದುಬಂದಿದೆ.
ಬುಧವಾರ ಅಥವಾ ಗುರುವಾರ ಕುಮಾರಸ್ವಾಮಿಯವರು ರಾಜಧಾನಿ ದೆಹಲಿಗೆ ಭೇಟಿ ನೀಡಲಿದ್ದು, ಕೈ ಪಾಳಯದಲ್ಲಾಗುತ್ತಿರುವ ಬೆಳವಣಿಗೆ ಕುರಿತು ಉನ್ನತ ನಾಯಕರೊಂದಿಗೆ ಮಾತುಕತೆ ನಡೆಸಲಿದ್ದಾರೆಂದು ವರದಿಗಳು ತಿಳಿಸಿವೆ.
ಮುಖ್ಯಮಂತ್ರಿಗಳು ಶೀಘ್ರದಲ್ಲಿಯೇ ಕೇಂದ್ರ ಜಲಸಂಪನ್ಮೂಲ ಸಚಿವರು, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿ ಮಾಡಲಿದ್ದು, ಈ ವೇಳೆ ರಾಜ್ಯ ಹೆದ್ದಾರಿ ಹಾಗೂ ನೀರಾವರಿ ಯೋಜನೆಗಳ ಕುರಿತಂತೆ ಚರ್ಚೆ ನಡೆಸಲಿದ್ದಾರೆಂದು ಮುಖ್ಯಮಂತ್ರಿಗಳ ಕಚೇರಿ ಕೂಡ ಹೇಳಿಕೆ ನೀಡಿದೆ.
ಬೆಳಗಾವಿ ಹಾಗೂ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡುವ ಕುರಿತಂತೆ ಚರ್ಚೆ ನಡೆಸಲು ಕುಮಾರಸ್ವಾಮಿಯವರು ವಿಮಾನಯಾನ ಸಚಿವ ಸುರೇಶ್ ಪ್ರಭು ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಇದಲ್ಲದೆ, ವಿದ್ಯುತ್ ಉತ್ಪಾದನೆಗಾಗಿ ಕಲ್ಲಿದ್ದಲು ಪೂರೈಕೆ ಕುರಿತಂತೆ ಚರ್ಚೆ ನಡೆಸಲು ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರನ್ನೂ ಭೇಟಿ ಮಾಡಲಿದ್ದಾರೆಂದು ತಿಳಿಸಿದೆ.