ರಾಜ್ಯ
ಮೊದಲು ಪ್ರವಾಹ ಸಂತ್ರಸ್ತರ ರಕ್ಷಣೆ, ನಂತರ ಸಚಿವ ಸಂಪುಟ ರಚನೆ: ಸಿಎಂ ಯಡಿಯೂರಪ್ಪ
ರಾಜ್ಯದ ಪ್ರವಾಹ ಸಂತ್ರಸ್ತ ಪ್ರದೇಶಗಳಲ್ಲಿ ಪರಿಹಾರ ಕಾಮಗಾರಿಗಳಿಗೆ ಮೊದಲ ಆದ್ಯತೆ ನೀಡಿ. ನಂತರ ಸಚಿವ ಸಂಪುಟ ರಚನೆ ಬಗ್ಗೆ ಯೋಚನೆ ಮಾಡಿ...
ಬೆಂಗಳೂರು: ರಾಜ್ಯದ ಪ್ರವಾಹ ಸಂತ್ರಸ್ತ ಪ್ರದೇಶಗಳಲ್ಲಿ ಪರಿಹಾರ ಕಾಮಗಾರಿಗಳಿಗೆ ಮೊದಲ ಆದ್ಯತೆ ನೀಡಿ. ನಂತರ ಸಚಿವ ಸಂಪುಟ ರಚನೆ ಬಗ್ಗೆ ಯೋಚನೆ ಮಾಡಿ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೂಚನೆ ಮೇರೆಗೆ ಬೆಂಗಳೂರಿಗೆ ವಾಪಸ್ಸಾಗಿದ್ದೇನೆ. ಮೂರು ದಿನಗಳು ಪ್ರವಾಹದಿಂದ ಸಮಸ್ಯೆಗೆ ಸಿಲುಕಿರುವ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬುಧವಾರ ಹೇಳಿದ್ದಾರೆ.
ಇಂದು ನವದೆಹಲಿಯಿಂದ ನಗರಕ್ಕೆ ಆಗಮಿಸಿದ ನಂತರ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಬೆಳಗಾವಿ ಜಿಲ್ಲೆಗೆ ಈಗ ತೆರಳುತ್ತಿದ್ದು, ನೆರೆ ಸಮಸ್ಯಾತ್ಮಕ ಪ್ರದೇಶಗಳಿಗೆ ಭೇಟಿ ನೀಡಲಿದ್ದೇನೆ. ನವದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದೇನೆ. ಅಧ್ಯಕ್ಷರ ಸೂಚನೆ ಮೇರೆಗೆ ಮೊದಲು ಪ್ರವಾಹ ಸಮಸ್ಯೆ ಬಗೆಹರಿಸಿದ ನಂತರ ಸಂಪುಟ ವಿಸ್ತರಣೆ ಬಗ್ಗೆ ನೋಡೋಣ ಎಂದು ಬಿಜೆಪಿ ವರಿಷ್ಠರು ಹೇಳಿದ್ದಾರೆ ಎಂದರು.
ಕೇಂದ್ರ ಸಚಿವ ಸುರೇಶ್ ಅಂಗಡಿ ಸೇರಿ ಎಲ್ಲ ಸಂಸದರು, ಶಾಸಕರಿಗೆ ಸ್ವಕ್ಷೇತ್ರದಲ್ಲಿರುವಂತೆ ಸೂಚಿಸಲಾಗಿದೆ. ಬೆಳಗಾವಿ, ಬಾಗಲಕೋಟೆ ,ಯಾದಗಿರಿ, ಕೊಪ್ಪಳ, ಹಾಗೂ ಬಿಜಾಪುರ ಜಿಲ್ಲೆಗಳ ಪ್ರವಾಹ ಪರಿಸ್ಥಿತಿ ಪರಿಶೀಲನೆ ನಡೆಸಲಾಗುವುದು ಎಂದರು.
ಬುಧವಾರ ಸಂಜೆ 5 ಗಂಟೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಭೇಟಿಗೆ ಸಮಯ ಪಡೆದಿದ್ದೇ. ಆದರೆ ಪಕ್ಷದ ಅಧ್ಯಕ್ಷರ ಸೂಚನೆ ಮೇರೆಗೆ ಬೆಂಗಳೂರಿಗೆ ವಾಪಸ್ಸಾಗಿದ್ದು, ಆ.10 ಅಥವಾ 11ರಂದು ಮತ್ತೆ ದೆಹಲಿಗೆ ತೆರಳಿ ಸಚಿವ ಸಂಪುಟ ರಚನೆ ಬಗ್ಗೆ ಹೈಕಮಾಂಡ್ ಅನುಮತಿ ಪಡೆಯಲಿದ್ದೇನೆ ಎಂದು ಸಿಎಂ ತಿಳಿಸಿದರು.