ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ನಾಳೆ ದಕ್ಷಿಣ ಕನ್ನಡ ಹಾಗೂ ನಾಡಿದ್ದು ಸೋಮವಾರ ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಪ್ರವಾಹ ಮತ್ತು ಭೂಕುಸಿತ ಸಂಭವಿಸಿರುವ ಪ್ರದೇಶಗಳಿಗೆ ಸಿಎಂ ಯಡಿಯೂರಪ್ಪ ಭೇಟಿ ನೀಡಲಿದ್ದಾರೆ.
ಶನಿವಾರ ಮಂಗಳೂರಿಗೆ ಭೇಟಿ ನೀಡುವ ಕಾರ್ಯಕ್ರಮ ನಿಗದಿಯಾಗಿತ್ತಾದರೂ, ವೈಮಾನಿಕ ಸಮೀಕ್ಷೆ ನಡೆಸಲು ಸಾಧ್ಯವಿಲ್ಲದ ಕಾರಣ ರಸ್ತೆ ಮೂಲಕ ತೆರಳಬೇಕಾದ ಹಿನ್ನಲೆಯಲ್ಲಿ ಪ್ರವಾಸವನ್ನು ನಾಳೆಗೆ ಮುಂದೂಡಿದ್ದಾರೆ.
ಇಂದು ಮುಖ್ಯಮಂತ್ರಿ ಗೃಹ ಕಚೇರಿಯಲ್ಲಿ ಅಧಿಕಾರಿಗಳ ಸಭೆ ಬಳಿಕ ಕೊಡಗು ಜಿಲ್ಲೆಗೆ ತೆರಳುವುದಾಗಿ ಪ್ರಕಟಿಸಿದ್ದರು. ಆದರೆ ಕಳೆದ ಮೂರು ದಿನಗಳಿಂದ ನಿರಂತರ ಪ್ರವಾಹ ಸಂತ್ರಸ್ಥರ ಭೇಟಿಯಿಂದ ಬಳಲಿರುವ ಯಡಿಯೂರಪ್ಪ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ನಾಳೆ ಬೆಳಗ್ಗೆ ಕರಾವಳಿ ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳಲಿದ್ದಾರೆ.
Advertisement