ಬಿಜೆಪಿ ಸರ್ಕಾರ ಟೇಕಾಫ್ ಆಗಿರುವ ಬಗ್ಗೆ ಯಡಿಯೂರಪ್ಪ ಮಾತನಾಡಲಿ- ಎಚ್ ಡಿ ಕುಮಾರಸ್ವಾಮಿ
ಹಾಸನ: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿನ ನೆರೆ ಪರಿಸ್ಥಿತಿಯನ್ನು ಕಂಡೂ ಯಾವುದೇ ಪ್ರತಿಕ್ರಿಯೆ ಹಾಗೂ ಭರವಸೆ ನೀಡದೆ ಸುಮ್ಮನೆ ಹಿಂತಿರುಗಿರುವುದು ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್ ಶಾಸಕಾಂಗ ನಾಯಕ ಎಚ್ ಡಿ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ರಾಜ್ಯದಲ್ಲಿ ಹಿಂದೆಂದೂ ಇಷ್ಟೊಂದು ದೊಡ್ಡ ಮಟ್ಟದ ಪ್ರವಾಹ ಆಗಿರಲಿಲ್ಲ. ಬಿಎಸ್ ಯಡಿಯೂರಪ್ಪ ಕಳೆದ ಬಾರಿ ಮುಖ್ಯಮಂತ್ರಿಯಾಗಿದ್ದಾಗಲೂ ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹ ಉಂಟಾಗಿತ್ತು. ಬೆಳಗಾವಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಭಾರೀ ಹಾನಿಯುಂಟಾಗಿದ್ದು, ಕನಿಷ್ಠ ಒಂದು ತಿಂಗಳು ಇಲ್ಲಿ ಕ್ಯಾಂಪ್ ಮಾಡಿ ತಂಗಿದರೂ ಸಹ ನಷ್ಟಪೀಡಿತ ಗ್ರಾಮಗಳಿಗೆ ತೆರಳಲು ಸಾಧ್ಯವಾಗುವುದಿಲ್ಲ. ಅಷ್ಟರ ಮಟ್ಟಿಗೆ ಈ ಭಾಗದಲ್ಲಿ ನಷ್ಟ ಉಂಟಾಗಿದೆ ಎಂದರು.
ಕೊಡಗು, ವಿರಾಜಪೇಟೆ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿಯೂ ಹೆಚ್ಚು ಪ್ರವಾಹವಾಗಿದೆ. ಅನಾರೋಗ್ಯದ ನಡುವೆಯೂ ಸಂಕಷ್ಟದಲ್ಲಿರುವ ಜನರ ಸಮಸ್ಯೆ ಆಲಿಸುವುದು ನನ್ನ ಜವಾಬ್ದಾರಿ ಎಂದು ನಂಬಿದವನು ನಾನು. ಪ್ರವಾಹ ಪರಿಸ್ಥಿತಿ ಬಗ್ಗೆ ಸರ್ಕಾರದ ನಡೆ ಪ್ರಶ್ನಿಸುವುದಿಲ್ಲ. ಇಂತಹ ಸಂದರ್ಭದಲ್ಲಿ ರಾಜಕೀಯ ಬೆರೆಸುವುದು ಸರಿಯಲ್ಲ ಎಂದು ಕುಮಾರಸ್ವಾಮಿ ಹೇಳಿದರು.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ