ಪೌರತ್ವ ಕಾಯ್ಜೆ ವಿರುದ್ಧ ಬೀದಿಗಿಳಿದ ಪ್ರತಿಭಟನಾಕಾರರು: ಪ್ರತಿಭಟನೆ ಬಿಸಿಗೆ ರಸ್ತೆಯಲ್ಲೇ ಗಂಟೆಗಟ್ಟಲೆ ನಿಂತ ವಾಹನಗಳು
ಬೆಂಗಳೂರು: ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಇದಾವುದನ್ನೂ ಲೆಕ್ಕಿಸದೆ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ವಿದ್ಯಾರ್ಥಿಗಳು ಹಾಗೂ ಚಿಂತಕರು ಸೇರಿದಂತೆ ವಿವಿಧ ಸಂಘಟನೆಗಳ ನೂರಾರು ಕಾರ್ಯಕರ್ತರು ಪ್ರತಿಭಟನೆಗಿಳಿದ ಪರಿಮಾಮ ರಾಜಧಾನಿಯ ಕೇಂದ್ರ ಭಾಗದಲ್ಲಿ ಗುರುವಾರ ಭಾರೀ ಸಂಚಾರ ದಟ್ಟಣೆ ಎದುರಾಗಿ, ಸಾರ್ವಜನಿಕರು ಹೈರಾಣರಾದರು.
ನಗರದ ಪುರಭವನದ ಮುಂದೆ ಬೆಳಿಗ್ಗೆಯಿಂದಲೇ ಗುಂಪು ಗುಂಪಾಗಿ ಜಮಾಯಿಸಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರ, ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ವಿರುದ್ಧ ಘೋಷಣೆಗಲನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಹೀಗೆ ಹತ್ತಾರು ಸಂಘಟನೆಗಳು ಒಮ್ಮೆಗೆ ಪ್ರತಿಭಟನೆಗಿಳಿದಗ ಹಿನ್ನೆಲೆಯಲ್ಲಿ ನಗರದ ಕೇಂದ್ರ ಭಾಗದ ಸಂಚಾರ ವ್ಯವಸ್ಥೆ ಮೇಲೆ ಭಾರೀ ಪರಿಣಾಮ ಉಂಟಾಯಿತು. ಮೆಜೆಸ್ಟಿಕ್ ಸುತ್ತಮುತ್ತಲ ಪ್ರದೇಶಗಳಲ್ಲಿ ಕಿ.ಮೀನಷ್ಟು ದೂರ ಸಂಚಾರ ದಟ್ಟಣೆ ಉಂಟಾಗಿತ್ತು. ದೂರದ ಸ್ಥಳಗಳಿಗೆ ತೆರಳುವ ಪ್ರಯಾಣಿಕರು ಅನಿವಾರ್ಯವಾಗಿ ಬಿಎಂಟಿಸಿ ಬಸ್ ಗಳಲ್ಲೇ ಕೂರುವಂತಾಯಿತು. ಇನ್ನು ಆಟೋ ರಿಕ್ಷಾ, ಕ್ಯಾಬ್ ಗಳಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರೂ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಸಮಸ್ಯೆ ಅನುಭವಿಸಿದರು.
ಪ್ರತಿಭಟನಾಕಾರರನ್ನು ನಿಯಂತ್ರಿಸಿ ಪೊಲೀಸರು, ಆ ಪ್ರದೇಷದಲ್ಲಿ ವಾಹನಗಳ ಸುಗಮ ಓಡಾಟಕ್ಕೆ ಅನುವು ಮಾಡಲು ಪರದಾಡಿದರು. 4 ತಾಸಿಗೂ ಅಧಿಕ ಹೊತ್ತು ಸಾರ್ವಜನಿಕರು ಸಂಕಷ್ಟ ಎದುರಿಸುವಂತಾಯಿತು.
ಬೆಳಿಗ್ಗೆ 10 ಗಂಟೆ ಸುಮಾರಿಗೆ ಪುರಭವನ ಮುಂದೆ ಪೌರತ್ವ ತಿದ್ದುಪಡಿ ವಿರೋಧಿ ಗುಂಪು ಸೇರಲಾರಂಭಿಸಿತು. ಹೊತ್ತೇರುತ್ತಿದ್ದಂತೆ ಪ್ರತಿಭಟನೆ ದನಿ ಸಹ ಜೋರಾಯಿತು. ಪ್ರತಿಭಟನೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ವಾಹನ ಸಂಚಾರ ನಿರ್ವಹಣೆಗೆ ಟೌನ್ ಹಾಲ್ ಸುತ್ತಮುತ್ತ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಆದರೆ, ಹೆಚ್ಚಿನ ಜನರು ಒಂದೇ ಕಡೆ ಸೇರಿದ ಕಾರಣ ವಾಹನಗಳ ಓಡಾಟಕ್ಕೆ ಅಡ್ಡಿಯಾಯಿತು. ಕೂಡಲೇ ಪರ್ಯಾಯ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿ, ಪರಿಸ್ಥಿತಿ ನಿಯಂತ್ರಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ