ವಿಶ್ವೇಶ ತೀರ್ಥ ಸ್ವಾಮೀಜಿ ಆರೋಗ್ಯ ವಿಚಾರಿಸಲು ಗಣ್ಯರ ದಂಡು
ಮಣಿಪಾಲ: ಉಡುಪಿ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿಗಳ ಆರೋಗ್ಯ ವಿಚಾರಿಸಲು ಗಣ್ಯರ ದಂಡೆ ಹರಿದು ಬರುತ್ತಿದೆ.
ಈ ನಡುವೆ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ವೈದ್ಯರು ಹೇಳಿದ್ದಾರೆ. ಜೊತೆಗೆ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಶ್ರೀಗಳ ಆರೋಗ್ಯ ಸ್ಥಿರವಾಗಿದೆ, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ತಿಳಿಸಿದೆ. 'ನಮ್ಮ ವೈದ್ಯರು ಸತತವಾಗಿ ಶ್ರೀಗಳ ಆರೋಗ್ಯದ ಮೇಲೆ ನಿಗಾ ವಹಿಸಿದ್ದು, ಪರಿಸ್ಥಿತಿ ಸ್ವಲ್ಪ ಇನ್ನೂ ಗಂಭೀರವಾಗಿದೆ. ಆದರೆ, ಶ್ರೀಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ' ಎಂದು ತಿಳಿಸಿದ್ದಾರೆ.
ಶ್ರೀಗಳನ್ನು ಕಾಣಲು ಭಕ್ತರು ಕೆಎಂಸಿ ಆಸ್ಪತ್ರೆಯತ್ತ ದೌಡಾಯಿಸುತ್ತಿದ್ದಾರೆ. ಆದರೆ, 'ಶ್ರೀಗಳನ್ನು ಕಾಣಲು ಯಾರೂ ಆಸ್ಪತ್ರೆಗೆ ಬರಬೇಡಿ, ರೋಗಿಗಳಿಗೆ ತೊಂದರೆ ಆಗುತ್ತೆ. ಶ್ರೀಗಳು ಆರೋಗ್ಯವಾಗಿದ್ದಾರೆ' ಎಂದು ಶ್ರೀಗಳ ಆಪ್ತ ಕಾರ್ಯದರ್ಶಿ ಭಕ್ತರಲ್ಲಿ ಕೋರಿಕೊಂಡಿದ್ದಾರೆ.
ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಆಸ್ಪತ್ರೆಗೆ ಭೇಟಿ ನೀಡಿ , ಶ್ರೀಗಳ ಆರೋಗ್ಯ ವಿಚಾರಿಸಲಿದ್ದಾರೆ.
ಬಿಜೆಪಿ ಹಿರಿಯ ನಾಯಕಿ ಉಮಾಭಾರತಿ ಕೂಡಾ ಇಂದು ಸಂಜೆ ಆಗಮಿಸಿ, ಶ್ರೀಗಳ ಆರೋಗ್ಯ ವಿಚಾರಿಸಲಿದ್ದು, ಉಡುಪಿಯಲ್ಲೇ ರಾತ್ರಿ ವಾಸ್ತವ್ಯ ಹೂಡಲಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ