ಮಂಗಳೂರು: ಜೀಪು ಹಾಗೂ ಕಂಟೇನರ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಜೀಪು ಚಾಲಕ ಮೃತಪಟ್ಟಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬೆದ್ರೋಡಿ ಎಂಬಲ್ಲಿ ಶನಿವಾರ ಬೆಳಿಗ್ಗೆ ಸಂಭವಿಸಿದೆ. ಮೃತ ಚಾಲಕನನ್ನು ನೆಲ್ಯಾಡಿ ನಿವಾಸಿ ಸಿದ್ದೀಕ್ ಎಂದು ಗುರುತಿಸಲಾಗಿದೆ.
ನೆಲ್ಯಾಡಿಯಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಜೀಪು ಹಾಗೂ ಕಂಟೇನರ್ ನಡುವೆ ಬೆದ್ರೋಡಿಯಲ್ಲಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಜೀಪಿನಲ್ಲಿದ್ದ ಏಳು ಮಂದಿ ಪ್ರಯಾಣಿಕರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಚಾಲಕ ಮೃತಪಟ್ಟಿದ್ದಾರೆ. ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ.
ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Advertisement