ಪೇಜಾವರ ಶ್ರೀ ನಿಧನ: ರಾಜ್ಯಾದ್ಯಂತ 3 ದಿನ ಶೋಕಾಚರಣೆ; ಬೆಂಗಳೂರಿನಲ್ಲಿ ಅಂತ್ಯಕ್ರಿಯೆ

ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಪೇಜಾವರ ಮಠದ ಹಿರಿಯ ಯತಿಗಳಾದ ವಿಶ್ವೇಶತೀರ್ಥ ಸ್ವಾಮೀಜಿ ಅವರ ನಿಧನ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದೆ.
ಪೇಜಾವರ ತೀರ್ಥ ಸ್ವಾಮೀಜಿ
ಪೇಜಾವರ ತೀರ್ಥ ಸ್ವಾಮೀಜಿ
Updated on

ಬೆಂಗಳೂರು: ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಪೇಜಾವರ ಮಠದ ಹಿರಿಯ ಯತಿಗಳಾದ ವಿಶ್ವೇಶತೀರ್ಥ ಸ್ವಾಮೀಜಿ ಅವರ ನಿಧನ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದೆ.

ಮಣಿಪಾಲದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ ಅವರು, ಬೆಂಗಳೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ಮಾಡಲಾಗುವುದು ಎಂದರು.

ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸ್ವಾಮೀಜಿ ಆಶಯದಂತೆ ಬೆಂಗಳೂರಿನ ವಿದ್ಯಾಪೀಠದಲ್ಲಿ ಬೃಂದಾವನ ನಿರ್ಮಿಸಲಾಗುವುದು. ನಂತರ ಸೇನಾ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಕರೆತರಲಾಗುವುದು, ನಂತರ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ತಮ್ಮ ಮತ್ತು ಸ್ವಾಮೀಜಿ ಒಡನಾಟ ನೆನಪಿಸಿಕೊಂಡು ಭಾವುಕರಾದ ಯಡಿಯೂರಪ್ಪ, ‘ನಾನು ಸ್ವಾಮೀಜಿ ಜೊತೆಗೆ ಕಳೆದ 50 ವರ್ಷಗಳಿಂದ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದೆ. ಅವರು ಅಯೋಧ್ಯೆಯಲ್ಲಿ ರಾಮನ ವಿಗ್ರಹ ಪ್ರತಿಷ್ಠಾಪನೆಗೆ ಹೋದಾಗ ಅವರ ಜೊತೆಗೆ ನಾನೂ ಇದ್ದೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗಬೇಕು ಎಂಬ ಕನಸು ಅವರದ್ದಾಗಿತ್ತು. ಈಗ ಸುಪ್ರೀಂ ಕೋರ್ಟ್‌ ಸಹ ಅದೇ ತೀರ್ಪು ನೀಡಿದೆ. ಆದರೆ ರಾಮಮಂದಿರ ನೋಡಲು ಅವರಿಗೆ ಆಗಲಿಲ್ಲ’ ಎಂದು ಹೇಳಿದರು.

‘ನಮ್ಮ ದೇಶದ ಇತಿಹಾಸದಲ್ಲಿ ಯಾವುದೇ ಸ್ವಾಮೀಜಿ ಹೀಗೆ ದೇಶದ ಉದ್ದಗಲಕ್ಕೆ ಪ್ರವಾಸ ಮಾಡಿದ್ದು ನಾನು ನೋಡಿಲ್ಲ. ಆಸ್ಪತ್ರೆ ಸೇರುವ ಎರಡು ದಿನ ಹಿಂದೆಯೂ ಪ್ರವಾಸ ಮಾಡಿದ್ದರು. ಇಂಥ ಅಪರೂಪದ ಯತಿವರೇಣ್ಯ ಸಿಗುವುದು ಕಷ್ಟ. ಅಂಥ ಮಹಾನ್ ಪೂಜ್ಯರನ್ನು ಕಳೆದುಕೊಂಡು ದೇಶ ಬಡವಾಗಿದೆ’ ಎಂದು ವಿಷಾದಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com