ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸರ್ಕಾರಿ ನೌಕರರ ಬಡ್ತಿ ಮೀಸಲಾತಿಗೆ ಸಂಬಂಧಪಟ್ಟ ಕಾಯ್ದೆ ಅನುಷ್ಠಾನಕ್ಕೆ ಬುಧವಾರ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಇಂದು ವಿಧಾನೌಧದಲ್ಲಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡ ಅವರು, ಎಸ್ಸಿ ಎಸ್ಟಿ ಬಡ್ತಿ ಮೀಸಲಾತಿ ವಿಧೇಯಕ ಜಾರಿಗೆ ಸಂಪುಟ ಸಮ್ಮತಿ ನೀಡಿದೆ ಎಂದರು.
ಈಗಾಗಲೇ ಎಸ್ಸಿ, ಎಸ್ಟಿ ಬಡ್ತಿ ಮೀಸಲಾತಿ ಮಸೂದೆಗೆ ರಾಷ್ಟ್ರ ಪತಿಗಳ ಅಂಕಿತ ಹಾಕಿದ್ದಾರೆ. ಹೀಗಾಗಿ ಕಾಯ್ದೆ ಜಾರಿಗೊಳಿಸಲಾಗುತ್ತಿದೆ ಮತ್ತು ಸುಪ್ರೀಂ ಕೋರ್ಟ್ ನ ಅಂತಿಮ ತೀರ್ಪಿಗೆ ಒಳಪಡುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದರು.
ರಾಜ್ಯ ಸರ್ಕಾರದ ಈ ನಿರ್ಧಾರದಿಂದ ಸುಪ್ರೀಂ ಕೋರ್ಟ್ ತೀರ್ಪು ಉಲ್ಲಂಘನೆಯಾಗುವುದಿಲ್ಲ ಎಂದು ಮಾಜಿ ಅಟಾರ್ನಿ ಜನರಲ್ ಮುಕುಲ್ ರೋಹ್ಟಗಿಯವರೇ ಲಿಖಿತವಾಗಿ ನಮಗೆ ತಿಳಿಸಿದ್ದಾರೆ ಎಂದು ಸಚಿವರು ಹೇಳಿದ್ದಾರೆ.
ಈ ಕಾಯ್ದೆ ಅಮುಷ್ಠಾನಕ್ಕೆ ಜೇಷ್ಠತಾ ಪಟ್ಟಿ ತಯಾರು ಮಾಡಬೇಕಿದೆ. ನಿಯಮಾವಳಿಗಳ ಪ್ರಕಾರವೇ ನಾವು ಜೇಷ್ಠತಾ ಪಟ್ಟಿ ಸಿದ್ಧಪಡಿಸಿ ಸುಪ್ರೀಂ ಕೋರ್ಟ್ ಗೆ ಸಲ್ಲಿಸುತ್ತೇವೆ ಎಂದರು.
ಬಡ್ತಿ ಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಯಥಾಸ್ಥಿತಿ ಕಾಪಾಡುವಂತೆ ಹೇಳಿತ್ತ. ಕಾಯ್ದೆ ಅನುಷ್ಠಾನ ಮಾಡದಂತೆ ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ಎಲ್ಲಿಯೂ ಉಲ್ಲೇಖೀಸಿಲ್ಲ. ಕಾಯ್ದೆ ಜಾರಿಗೆ ತಡೆ ನೀಡುವಂತೆಯೂ ಹೇಳಿಲ್ಲ. ಹೀಗಿರುವಾಗ ಅನುಷ್ಠಾನಗೊಳಿಸಿದರೆ ಕಾನೂನು ಉಲ್ಲಂಘನೆಯಾಗುವುದಿಲ್ಲ ಎಂದು ಕೃಷ್ಣ ಭೈರೇಗೌಡ ಅವರು ತಿಳಿಸಿದ್ದಾರೆ.
ಈ ಸಂಬಂಧ ನಾವು ಹಿರಿಯ ವಕೀಲ ಮುಕುಲ್ ರೊಹ್ಟಗಿ ಅವರ ಅಭಿಪ್ರಾಯ ಪಡೆದಿದ್ದೇವೆ. ಅವರು ಸಹ ವಿಧೇಯಕ ಜಾರಿ ಮಾಡಬಹುದು ಅಂತ ಹೇಳಿದ್ದಾರೆ.
ಅದರಂತೆ ಇಂದಿನ ಸಂಪುಟದಲ್ಲಿ ತೀರ್ಮಾನ ತೆಗೆದುಕೊಂಡಿದ್ದೇವೆ ಎಂದರು.
ಸಿಹಿ ಹಂಚಿ ಸಂಭ್ರಮಾಚರಣೆ
ಎಸ್ಸಿ, ಎಸ್ಟಿ ನೌಕರರ ಬಡ್ತಿ ಮೀಸಲಾತಿ ವಿಧೇಯಕ ಜಾರಿಗೆ ರಾಜ್ಯ ಸಚಿವ ಸಂಪುಟ ಸಭೆ ಅಸ್ತು ಎನ್ನುತ್ತಿದ್ದಂತೆ ವಿಧಾನ ಸೌಧದಲ್ಲಿರುವ ಪರಿಶಿಷ್ಟ ಜಾತಿ ಮತ್ತು ವರ್ಗದ ನೌಕರರು ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಅವರ ಕಛೇರಿಗೆ ತೆರಳಿ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು.