ರಾಜ್ಯದಲ್ಲಿ ಕುಡಿಯುವ ನೀರು, ಜಾನುವಾರುಗಳ ಮೇವು, ಜನರು ಗುಳೆ ಹೋಗದಂತೆ ಉದ್ಯೋಗ, ಬರ ನಿರ್ವಹಣೆ ಸೇರಿದಂತೆ ಹತ್ತು-ಹಲವು ಜ್ವಲಂತ ಸಮಸ್ಯೆಗಳು ಇದ್ದು, ಅಧಿವೇಶನದಲ್ಲಿ ಜ್ವಲಂತ ಸಮಸ್ಯೆಗಳಿಗಿಂತ ರಾಜಕೀಯ ವಿಚಾರವೇ ಹೆಚ್ಚು ಪ್ರಸ್ತಾಪವಾಗುವ ಸಾಧ್ಯತೆಗಳಿವೆ. ಮೈತ್ರಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ಸಕಲ ಪ್ರಯತ್ನಗಳನ್ನು ನಡೆಸಿದ್ದು, ಈಗಾಗಲೇ ಪ್ರಶ್ನೆಗಳನ್ನು ಸಿದ್ಧಪಡಿಸಿಕೊಂಡಿದೆ. ರಾಜ್ಯ ಸರ್ಕಾರ ಬಹುಮತ ಕಳೆದುಕೊಂಡಿರುವುದರಿಂದ ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು ಎಂಬ ಬೇಡಿಕೆ ಮುಂದಿಟ್ಟು ಬಿಜೆಪಿ ಸದನದಲ್ಲಿ ತೀವ್ರ ಹೋರಾಟ ನಡೆಸಿ ಕಲಾಪಕ್ಕೆ ಅಡ್ಡಿಪಡಿಸುವ ಸಾಧ್ಯತೆ ಇದೆ. ಸಂದಿಗ್ಧ ಪರಿಸ್ಥಿತಿಯಲ್ಲಿರುವ ಸರ್ಕಾರ ಅಧಿವೇಶನ ನಡೆಸುತ್ತಿರುವುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.