ಚಿತ್ರದುರ್ಗ: ಲಾರಿ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬುಧವಾರ ನಡೆದಿದೆ.
ಇಂದು ಮಧ್ಯಾಹ್ನ ಚಿತ್ರದುರ್ಗ ತಾಲೂಕಿನ ಬೊಗಳೇರಹಟ್ಟಿ ಬಳಿ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಈ ಅಪಘಾತ ಸಂಭವಿಸಿದ್ದು, ಮೃತರನ್ನು ಜಗಳೂರು ತಾಲೂಕು ಬಂಗಾರಕ್ಕನಗುಡ್ಡ ಗ್ರಾಮದ ಕೇಶವಮೂರ್ತಿ(40), ನಾಗಮ್ಮ(30) ಮತ್ತು ರಾಧಿಕಾ(22) ಎಂದು ಗುರುತಿಸಲಾಗಿದೆ.
ಕಾರಿನಲ್ಲಿದ್ದ ಕಾವ್ಯ ಎಂಬ ಮಹಿಳೆಗೆ ಗಂಭೀರ ಗಾಯವಾಗಿದ್ದು, ಕೂಡಲೇ ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜಗಳೂರಿನಿಂದ ಚಿತ್ರದುರ್ಗಕ್ಕೆ ಬರುತ್ತಿದ್ದ ಕಾರಿಗೆ ಹೊಸಪೇಟೆ ಕಡೆಗೆ ತೆರಳುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ.
ಈ ಸಂಬಂಧ ತುರುವನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.