ರಾಜ್ಯ
ಪಿಎಂ ಫಸಲ್ ಭೀಮಾ ಯೋಜನೆ ಸೂಕ್ತ ಜಾರಿಗೆ ಹೈಕೋರ್ಟ್ ಮೊರೆ ಹೋದ ರೈತ ಸಂಘ
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಪರಿಹಾರ ನೀಡದೆ ರೈತರಿಗೆ ರಾಜ್ಯ ಮತ್ತು ಕೇಂದ್ರ ...
ಬೆಂಗಳೂರು: ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಪರಿಹಾರ ನೀಡದೆ ರೈತರಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಅನ್ಯಾಯ ಮಾಡುತ್ತಿವೆ ಎಂದು ಆರೋಪಿಸಿ ಅಖಂಡ ಕರ್ನಾಟಕ ರೈತ ಸಂಘ ಹೈಕೋರ್ಟ್ ಮೊರೆ ಹೋಗಿದೆ.
ಸಂಘದ ಯಾದಗಿರಿ ಜಿಲ್ಲಾ ಸಂಚಾಲಕ ಮಲ್ಲನಗೌಡ ಪರಿವಾರ್ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಆಲಿಸಿದ ಕೋರ್ಟ್ ನ ವಿಭಾಗೀಯ ಪೀಠದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎನ್ ನಾರಾಯಣ ಸ್ವಾಮಿ ಮತ್ತು ನ್ಯಾಯಮೂರ್ತಿ ಪಿ ಎಸ್ ದಿನೇಶ್ ಕುಮಾರ್ ಕೃಷಿ ಮತ್ತು ರೈತರ ಅಭಿವೃದ್ಧಿ ಸಚಿವಾಲಯ, ಕಾರ್ಯದರ್ಶಿಗಳು, ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಕೃಷಿ ಇಲಾಖೆಯ ಕಾರ್ಯದರ್ಶಿಗಳಿಗೆ ನೊಟೀಸ್ ಜಾರಿ ಮಾಡಿದ್ದಾರೆ.
ತೀವ್ರ ಬರಗಾಲದಿಂದ ಬೆಳೆ ನಷ್ಟವಾಗಿ ಜೀವನ ಮಾಡಲು ಸಾಧ್ಯವಾಗದೆ ರೈತರು ಆತ್ಮಹತ್ಯೆ ಮಾಡಿಕೊಳ್ಳುವುದನ್ನು ತಡೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕ್ರಮ ಕೈಗೊಳ್ಳಬೇಕೆಂದು ಅರ್ಜಿಯಲ್ಲಿ ಒತ್ತಾಯಿಸಲಾಗಿದೆ. ಸಾಲದಿಂದ ತತ್ತರಿಸಿ ಹೋಗಿರುವ ರೈತರನ್ನು ಕಾಪಾಡಲು ಸಾಂಸ್ಥಿಕ ವ್ಯವಸ್ಥೆ ಒದಗಿಸಲು ವಿಶೇಷ ರೈತರ ಆಯೋಗವನ್ನು ತಕ್ಷಣವೇ ರಚಿಸಬೇಕೆಂದು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಒತ್ತಾಯಿಸಿದ್ದಾರೆ.
ಕರ್ನಾಟಕದ ಜಿಲ್ಲೆಗಳ ಎಲ್ಲಾ ತಾಲ್ಲೂಕುಗಳ ವಿಮಾ ರೈತರಿಗೆ ತಕ್ಷಣವೇ ಬೆಳೆ ವಿಮೆ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಹಾಗೂ ರೈತರ ಆತ್ಮಹತ್ಯೆ ತಡೆಯಲು ರೈತರ ಆತ್ಮಹತ್ಯೆ ಮತ್ತು ಸಮಗ್ರ ಪರಿಹಾರ, ಪರಿಹಾರ ಮತ್ತು ಪುನರ್ವಸತಿ ನೀತಿಯನ್ನು ತಡೆಯಲು ಸಮಗ್ರ ಯೋಜನೆ ಜಾರಿಗೆ ತರಬೇಕೆಂದು ಅರ್ಜಿದಾರರು ಒತ್ತಾಯಿಸಿದ್ದಾರೆ.