ಬೆಂಗಳೂರು: ಕರ್ನಾಟಕದ ಸಿಂಗಂ ಎಂದೇ ಖ್ಯಾತಿ ಪಡೆದಿರುವ ಖಡಕ್ ಐಪಿಎಸ್ ಅಧಿಕಾರಿ ಡಿಸಿಪಿ ಕೆ ಅಣ್ಣಾಮಲೈ ಅವರು ಇದೀಗ ಖಾಕಿ ಕಳಚಿ ರಾಜಕೀಯ ಪ್ರವೇಶಿಸಲು ಸಿದ್ಧತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಸದ್ಯ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಆಗಿ ಕಾರ್ಯನಿರ್ವಹಿಸುತ್ತಿರುವ ಅಣ್ಣಾಮಲೈ ಅವರು ಜೂನ್ ಮೊದಲ ವಾರದಲ್ಲಿ ರಾಜೀನಾಮೆ ನೀಡಿ ರಾಜಕೀಯಕ್ಕೆ ಧುಮುಕಲಿದ್ದಾರೆ ಎನ್ನಲಾಗಿದೆ.
ಅಣ್ಣಾಮಲೈ ಅವರು ಈ ಸಂಬಂಧ ನಾಳೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡುತ್ತಿದ್ದು, ರಾಜೀನಾಮೆ ಕುರಿತು ಮಾಹಿತಿ ನೀಡಲಿದ್ದಾರೆ ಎನ್ನಲಾಗಿದೆ.
ಸಾಮಾಜ ಸೇವೆಯಲ್ಲಿ ಮತ್ತಷ್ಟು ತೊಡಗಿಸಿಕೊಳ್ಳುವ ಉದ್ದೇಶದಿಂದ ರಾಜಕೀಯಕ್ಕೆ ಬರಲಿದ್ದಾರೆ ಎನ್ನಲಾಗಿದ್ದು, ತಮಿಳುನಾಡಿನಲ್ಲಿ ತಮ್ಮ ರಾಜಕೀಯ ಜೀವನ ಆರಂಭಿಸಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
2011ನೇ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿರುವ ಅಣ್ಣಾಮಲೈ ಅವರು ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಎಸ್ಪಿಯಾಗಿ ಕಾರ್ಯನಿರ್ವಹಿಸಿದ್ದು, ದಿಢೀರ್ ರಾಜೀನಾಮೆ ನಿರ್ಧಾರ ಸಾಕಷ್ಟು ಕುತೂಹಲ ಮೂಡಿಸಿದೆ.
ಅಣ್ಣಾಮಲೈ ಅವರು ರಾಜೀನಾಮೆ ನೀಡಿದ ಬಳಿ ಡಿಎಂಕೆ ಸೇರ್ಪಡೆಯಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, 2021ರಲ್ಲಿ ಕೊಯಮತ್ತೂರು ಕ್ಷೇತ್ರದಿಂದ ತಮಿಳುನಾಡು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ. ಅಲ್ಲದೆ ಡಿಎಂಕೆ ಅಧ್ಯಕ್ಷ ಸ್ಟಾಲಿನ್ ಅವರು ಸಹ ಇದಕ್ಕೆ ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ.