ಮಹದಾಯಿ ಹೋರಾಟಗಾರರಿಂದ ರಾಜ್ಯಪಾಲರಿಗೆ ಮನವಿ; ಧರಣಿ ಕೈಬಿಟ್ಟ ರೈತರು
ಬೆಂಗಳೂರು: ಕಳೆದೆರಡು ದಿನಗಳಿಂದ ನಗರದ ರೈಲು ನಿಲ್ದಾಣದ ಆವರಣದಲ್ಲಿ ಮಹದಾಯಿ ಕಳಸಾ ಬಂಡೂರಿ ಯೋಜನೆಗೆ ಅಧಿಸೂಚನೆ ಹೊರಡಿಸುವಂತೆ ಆಗ್ರಹಿಸಿ ಅಹೋರಾತ್ರಿ ಧರಣಿ ನಡೆಸುತ್ತಿದ್ದ ರೈತರು ಶನಿವಾರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಬಳಿಕ ತಮ್ಮ ಧರಣಿ ಅಂತ್ಯಗೊಳಿಸಿದ್ದಾರೆ.
ರೈತರ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದು ಮೂವರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದ ಬೆನ್ನಲ್ಲೆ ಎಚ್ಚೆತ್ತುಕೊಂಡ ನಗರ ಪೊಲೀಸ್ ಆಯುಕ್ತರು ಕೆಳಹಂತದ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿ ಐವರು ಮಹಿಳಾ ರೈತ ಮುಖಂಡರನ್ನು, ರಾಜಭವನಕ್ಕೆ ತೆರಳಲು ಅವಕಾಶ ಕಲ್ಪಿಸಿದರು. ರಾಜ್ಯಪಾಲರ ಕಚೇರಿಯಲ್ಲಿ ಅಧಿಸೂಚನೆ ಹೊರಡಿಸುವಂತೆ, ಮಹಿಳಾ ರೈತ ಮುಖಂಡರು ಸಲ್ಲಿಸಿದ ಮನವಿಯನ್ನು ಸ್ವೀಕರಿಸಿದ ನಂತರ, ರೈತರು ಪ್ರತಿಭಟನೆಯನ್ನು ಅಂತ್ಯಗೊಳಿಸಿ, ತಮ್ಮ ತಮ್ಮ ಊರುಗಳಿಗೆ ತೆರಳಿದರು.
ಇದಕ್ಕೂ ಮುನ್ನ ಪ್ರತಿಭಟನಾ ಸ್ಥಳಕ್ಕೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಭೇಟಿ ನೀಡಿ, ರಾಜ್ಯಪಾಲರು ಅನ್ಯ ಕೆಲಸದಲ್ಲಿ ನಿರತರಾಗಿದ್ದಾರೆ. ಆದ್ದರಿಂದ ತಮಗೆ ಮನವಿ ಪತ್ರ ನೀಡುವಂತೆ ಕೋರಿದರು. ಆದರೆ ರೈತ ಹೋರಾಟಗಾರರು ಅದನ್ನು ನಿರಾಕರಿಸಿ ರಾಜ್ಯಪಾಲರ ಭೇಟಿಗೆ ಪಟ್ಟು ಹಿಡಿದರು.
ಇದರಿಂದ ನಿರಾಶರಾದ ಉಪ ಮುಖ್ಯಮಂತ್ರಿ ಕಾರಜೋಳ ಅವರು ಬರಿಗೈಯಲ್ಲಿ ಮರಳಿದರು. ನಂತರ ರಾಜ್ಯಪಾಲರ ಭೇಟಿಗೆ ರೈತರ ನಿಯೋಗಕ್ಕೆ ಅವಕಾಶ ಕಲ್ಪಿಸಲಾಯಿತು. ಮನವಿ ಸಲ್ಲಿಸಿದ ನಂತರ ಮಾತನಾಡಿದ ರೈತ ಮುಖಂಡರು, ಮಹದಾಯಿ ಕಳಸಾ ಬಂಡೂರಿ ಯೋಜನೆಗೆ ಸಂಬಂಧಿಸಿದಂತೆ ಕಾನೂನು ಹೋರಾಟ ಆರಂಭಿಸುತ್ತೇವೆ. ಗೆಜೆಟ್ ಅಧಿಸೂಚನೆ ಹೊರಡಿಸುವ ಕುರಿತಂತೆ ಸುಪ್ರೀಂಕೋರ್ಟ್ಗೆ ಅರ್ಜಿ ಹಾಕಲಿದ್ದೇವೆ. ನಮಗೆ ನೀರಿನ ಅವಶ್ಯಕತೆ ತುಂಬಾ ಇದೆ. ಈ ನಿಟ್ಟಿನಲ್ಲಿ ಈ ವಿಷಯ ತ್ವರಿತವಾಗಿ ನಡೆಯಬೇಕಿದೆ. 2018ರ ಆಗಸ್ಟ್ನಲ್ಲಿ ಮಹದಾಯಿ ನ್ಯಾಯಾಧೀಕರಣ ನೀರು ಹಂಚಿಕೆ ಕುರಿತಂತೆ ತೀರ್ಪು ನೀಡಿದೆ. ಈ ತೀರ್ಪನ್ನು ಜಾರಿಗೊಳಿಸಲು ಶೀಘ್ರ ಅಧಿಸೂಚನೆ ಹೊರಡಿಸಬೇಕು ಎಂದು ಆಗ್ರಹಿಸಿದರು.
ಮಳೆ-ಗಾಳಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಅಹವಾಲು ಆಲಿಸದ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಇಂದು ಗೋವಿಂದ ಕಾರಜೋಳ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ್ದರು.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ