ನಗರಗಳಿಗೆ ಮೂರು ದಿನಕ್ಕೊಮ್ಮೆ ಕುಡಿಯುವ ನೀರು ಪೂರೈಕೆ: ಜಗದೀಶ್ ಶೆಟ್ಟರ್
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳಿಗೆ ಇನ್ನು ಮುಂದೆ ಮೂರು ದಿನಕ್ಕೆ ಒಮ್ಮೆ ಕುಡಿಯುವ ನೀರು ಪೂರೈಸಲಾಗುತ್ತದೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹು-ಧಾ ಅವಳಿನಗರಕ್ಕೆ ಮತ್ತೆ ನೀರಸಾಗರ ಕೆರೆಯಿಂದ 40 ಎಂಎಲ್ಡಿ ಕುಡಿಯುವ ನೀರು ಪೂರೈಕೆಯಾಗುತ್ತಿದ್ದು, ಮುಂಬರುವ 15 ದಿನದಲ್ಲಿ 3 ದಿನಕ್ಕೊಮ್ಮೆ ಕುಡಿಯುವ ನೀರು ಸರಬರಾಜು ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಹುಬ್ಬಳ್ಳಿ-ಧಾರವಾಡ ಮಹಾನಗರಕ್ಕೆ ಒಟ್ಟು 200 ಎಂಎಲ್ಡಿ ನೀರಿನ ಅವಶ್ಯಕತೆ ಇದೆ. ಸದ್ಯ ಮಲಪ್ರಭಾದಿಂದ 160 ಎಂಎಲ್ಡಿ ನೀರು ಪೂರೈಕೆಯಾಗುತ್ತಿದ್ದು, 40 ಎಂಎಲ್ಡಿ ನೀರು ನೀರಸಾಗರ ಕೆರೆಯಿಂದ ಪೂರೈಸಲಾಗುತ್ತಿದೆ. ನೀರಸಾಗರ ಕೆರೆ ಬತ್ತಿದ ಸಂದರ್ಭದಲ್ಲಿನೀರಿನ ಸಮಸ್ಯೆ ಉಂಟಾಗುತ್ತಿರುವುದರಿಂದ ಮಲಪ್ರಭಾದಿಂದ ಹೆಚ್ಚುವರಿಯಾಗಿ 40 ಎಂಎಲ್ಡಿ ನೀರು ತರಲು 26 ಕೋಟಿ ರೂ. ವೆಚ್ಚದ ಕಾಮಗಾರಿ ಪ್ರಗತಿಯಲ್ಲಿದೆ ಎಂದು ತಿಳಿಸಿದರು.
ಈ ಕಾಮಗಾರಿ ಡಿಸೆಂಬರ್ರೊಳಗಾಗಿ ಪೂರ್ಣಗೊಳ್ಳಲಿದ್ದು, ಡಿಸೆಂಬರ್ ತಿಂಗಳಿಂದ ಅವಳಿನಗರದಲ್ಲಿ3 ದಿನಕ್ಕೊಮ್ಮೆ ನೀರು ಪೂರೈಕೆಯಾಗಲಿದೆ. ಅಲ್ಲದೆ, 24/7 ಕುಡಿಯುವ ನೀರುವ ಯೋಜನೆ ಇರುವ ವಾರ್ಡ್ಗಳಲ್ಲಿಸದ್ಯ ನಿತ್ಯ 4-5 ಗಂಟೆ ಮಾತ್ರ ನೀರು ಪೂರೈಕೆಯಾಗುತ್ತಿದೆ. ಈ ಕಾಮಗಾರಿ ಮುಕ್ತಾಯದ ನಂತರ ದಿನ 24 ಗಂಟೆ ಕುಡಿಯುವ ನೀರು ಲಭ್ಯವಾಗಲಿದೆ ಎಂದು ತಿಳಿಸಿದರು.
ಸಕರಾದ ಪ್ರಸಾದ ಅಬ್ಬಯ್ಯ, ಸಿ.ಎಂ. ನಿಂಬಣ್ಣವರ, ಜಿಲ್ಲಾಧಿಕಾರಿ ಎಂ. ದೀಪಾ ಚೋಳನ್ ಮತ್ತಿತರರು ಇದ್ದರು.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ