ಚಿತ್ರದುರ್ಗ: ಇತ್ತೀಚೆಗಷ್ಟೇ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಿಜೆಪಿ ಹಿರಿಯ ನಾಯಕ ಗೋವಿಂದ ಕಾರಜೋಳ ಅವರು, ರಸ್ತೆಗಳು ಉತ್ತಮವಾಗಿರುವುದರಿಂದಲೇ ಹೆಚ್ಚು ಹೆಚ್ಚು ಅಪಘಾತಗಳು ಸಂಭವಿಸುತ್ತಿವೆ ಎಂದು ಹೇಳುವ ಮೂಲಕ ಸುದ್ದಿಗೆ ಗ್ರಾಸವಾಗಿದ್ದಾರೆ.
ಹೊಳಲ್ಕೆರೆ ತಾಲ್ಲೂಕಿನ ಚಿತ್ರಹಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಗುಜರಾತ್ ಸೇರಿ ಹಲವೆಡೆ ಸಂಚಾರಿ ದಂಡದ ಮೊತ್ತ ಪರಿಷ್ಕರಣೆ ಮಾಡಿರುವುದು ಗಮನಕ್ಕೆ ಬಂದಿದೆ. ಸಚಿವ ಸಂಪುಟದಲ್ಲಿ ಚರ್ಚಿಸಿ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ’ ಎಂದು ಅವರು ಹೇಳಿದರು.
ಇದೇ ವೇಳೆ 'ರಸ್ತೆ ದುರಸ್ತಿ ಸೇರಿ ಮೂಲ ಸೌಲಭ್ಯ ಕಲ್ಪಿಸಿದ ಬಳಿಕ ದಂಡ ವಿಧಿಸಬೇಕು ಎಂಬ ವಾದವನ್ನು ಒಪ್ಪುವುದಿಲ್ಲ. ರಸ್ತೆ ಸುರಕ್ಷಿತವಾಗಿ ಇರುವುದರಿಂದಲೇ ಅಪಘಾತಗಳು ಹೆಚ್ಚಾಗುತ್ತಿವೆ. ಹೆದ್ದಾರಿಗಳಲ್ಲಿ ಹೆಚ್ಚು ವೇಗವಾಗಿ ವಾಹನಗಳು ಸಂಚರಿಸುತ್ತಿವೆ. 160 ಕಿ.ಮೀ. ವೇಗವಾಗಿ ಸಾಗುವುದರಿಂದ ಅಪಘಾತ ಸಂಭವಿಸುತ್ತಿವೆ’ ಎಂದು ಅವರು ಅಭಿಪ್ರಾಯಪಟ್ಟರು.
ಅಂತೆಯೇ ಸಂಚಾರ ನಿಯಮ ಉಲ್ಲಂಘನೆಯ ದಂಡದ ಪ್ರಮಾಣವನ್ನು ಏರಿಕೆ ಮಾಡಿದ್ದಕ್ಕೆ ವೈಯಕ್ತಿಕವಾಗಿ ನನ್ನ ಬೆಂಬಲವಿಲ್ಲ ಎಂದು ಹೇಳಿದ ಗೋವಿಂದ ಕಾರಜೋಳ ಅವರು, ಕಾಂಗ್ರೆಸ್ ಶಾಸಕ ಡಿ.ಕೆ.ಶಿವಕುಮಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡುವುದಿಲ್ಲ. ಇ.ಡಿ (ಜಾರಿ ನಿರ್ದೇಶನಾಲಯ) ಹಾಗೂ ಸಿಬಿಐ ತಮ್ಮ ಕೆಲಸ ಮಾಡುತ್ತಿವೆ ಎಂದು ಹೇಳಿದರು.
ಇನ್ನು ಕಾರಜೋಳ ಅವರ ಈ ಹೇಳಿಕೆ ಇದೀಗ ಸುದ್ದಿಗೆ ಗ್ರಾಸವಾಗಿದೆ.
Advertisement