ಬೆಂಗಳೂರು: ಪೊಲೀಸರ ವೇತನ ಪರಿಷ್ಕರಣೆ ಮಾಡಿ ಶುಕ್ರವಾರ ಅಧಿಸೂಚನೆ ಹೊರಡಿಸಿದ್ದು, ಹಣಕಾಸು ಇಲಾಖೆ ಶಿಫಾರಸ್ಸಿನಂತೆ ಉಳಿದವರಿಗೂ ವೇತನ ಪರಿಷ್ಕರಣೆಯನ್ನು ಶೀಘ್ರದಲ್ಲಿಯೇ ಮಾಡಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲ ಪಟ್ಟಿಯಲ್ಲಿ ಕೈ ಬಿಟ್ಟು ಹೋಗಿರುವ ಎಸ್ ಐ, ಎಸಿಪಿ ದರ್ಜೆಯ ಅಧಿಕಾರಿಗಳು, ಅಗ್ನಿ ಶಾಮಕ ಸಿಬ್ಬಂದಿ ಮತ್ತು ಬಂಧಿಖಾನೆ ಅಧಿಕಾರಿಗಳಿಗೂ ಸಹ ವೇತನ ಪರಿಷ್ಕರಣೆ ಮಾಡಲಾಗುವುದು, ಈ ಸಂಬಂಧ ಹಣಕಾಸು ಇಲಾಖೆಗೆ ಪ್ರಸ್ತಾವನೆ ಕಳುಹಿಸಿದ್ದೇವೆ. ಮತ್ತೊಂದು ಸುತ್ತೋಲೆ ಹೊರಡಿಸಿ ಅವರಿಗೂ ವೇತನ ಪರಿಷ್ಕರಣೆ ಮಾಡಲಾಗುವುದು ಎಂದರು.
ಜಿಎಸ್ ಟಿ ಕುರಿತಂತೆ ಸೆಪ್ಟೆಂಬರ್ 20 ರಂದು ಪಣಜಿಯಲ್ಲಿ ನಡೆಯಲಿರುವ ಜಿಎಸ್ ಟಿ ಮಂಡಳಿ ಸಭೆಯಲ್ಲಿ ತಾವು ಪಾಲ್ಗೊಳ್ಳಲಿದ್ದು, ರಾಜ್ಯದ ನಿಲುವನ್ನು ಪ್ರಕಟಿಸುವುದಾಗಿ ತಿಳಿಸಿದ ಸಚಿವರು, ಅದಕ್ಕೆ ಪೂರ್ವಭಾವಿಯಾಗಿ ಇಂದು ಬೆಂಗಳೂರಿನಲ್ಲಿ ಸಭೆ ನಡೆದಿದ್ದು, ಹಲವು ವಿಷಯಗಳ ಬಗ್ಗೆ ಮಹತ್ವದ ಚರ್ಚೆ ನಡೆಸಲಾಗಿದೆ ಎಂದು ಹೇಳಿದರು.
Advertisement