ಆರೋಪಿ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕಳೆದ ಜೂನ್ 23 ರಂದು ವಿಜಯಪುರದಲ್ಲಿ ಮಾಧ್ಯಮದವರ ಜತೆ ಮಾತನಾಡುತ್ತಾ ತಮ್ಮ ಬಗ್ಗೆ ಮಾನಹಾನಿ ಹೇಳಿಕೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ತಮ್ಮ ವಿರುದ್ಧ ದಾಖಲಾಗಿರುವ ಆದಾಯ ತೆರಿಗೆ ಇಲಾಖೆ (ಐಟಿ), ಜಾರಿ ನಿರ್ದೇಶನಾಲಯದ (ಇಡಿ) ಪ್ರಕರಣಗಳಿಂದ ಮುಕ್ತಿಗೊಳಿಸಲು ಸಹಾಯ ಮಾಡುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕೇಂದ್ರದ ಸಚಿವರುಗಳ ಮೇಲೆ ಒತ್ತಡ ಹಾಕುತ್ತಿದ್ದಾರೆ. ನನ್ನ ವಿರುದ್ಧದ ಪ್ರಕರಣಗಳನ್ನು ಮುಕ್ತಾಯ ಮಾಡಿದರೆ ಇದಕ್ಕೆ ಪ್ರತಿಯಾಗಿ ಕರ್ನಾಟಕದಲ್ಲಿ ಬಿಜೆಪಿ ಸರಕಾರ ಮಾಡಲು ನಾನು ವಿರೋಧ ಮಾಡುವುದಿಲ್ಲ ಅಂತ ಭರವಸೆ ನೀಡಿದ್ದಾರೆ ಎಂದು ಯತ್ನಾಳ್ ಅವರು ಈ ಸಂದರ್ಭದಲ್ಲಿ ಸುಳ್ಳು ಆರೋಪ ಮಾಡಿದ್ದಾರೆ. ಯತ್ನಾಳ್ ಅವರ ಈ ಹೇಳಿಕೆ ಎಲೆಕ್ಟ್ರಾನಿಕ್ ಹಾಗೂ ಮುದ್ರಣ ಮಾಧ್ಯಮದಲ್ಲಿ ಪ್ರಸಾರವಾಗಿದೆ. ಯತ್ನಾಳ್ ಅವರ ಸತ್ಯಕ್ಕೆ ದೂರವಾದ ಹೇಳಿಕೆಯಿಂದ ತಮ್ಮ ಪ್ರಾಮಾಣಿಕತೆ, ನೈತಿಕತೆ, ಪ್ರತಿಷ್ಠೆ ಹಾಗೂ ವರ್ಚಸ್ಸಿಗೆ ಧಕ್ಕೆಯಾಗಿದೆ. ಯತ್ನಾಳ್ ಅವರ ಈ ಆರೋಪ ಆಧಾರರಹಿತ, ದುರುದ್ದೇಶಪೂರ್ವಕ ಹಾಗೂ ಬೇಜವಾಬ್ದಾರಿಯಿಂದ ಕೂಡಿದ್ದು, ತಮ್ಮ ಮಾನಕ್ಕೆ ಹಾನಿ ಮಾಡಿದೆ ಎಂದು ಶಿವಕುಮಾರ್ ಆರ್ಜಿಯಲ್ಲಿ ವಾದಿಸಿದ್ದಾರೆ.