ಬೆಂಗಳೂರು: ರಾಜ್ಯದ ಎಲ್ಲ ಭಾಗಗಳಲ್ಲೂ ಮುಂಗಾರು ಚುರುಕಾಗಿದ್ದು, ಹವಾಮಾನ ಇಲಾಖೆ ಮುಂದಿನ ಮೂರು ನಾಲ್ಕು ದಿನಗಳಲ್ಲಿ ಕರ್ನಾಟಕದಲ್ಲಿ ಭಾರಿ ಮಳೆ(ರೆಡ್ ಅಲರ್ಟ್)ಯಾಗುವ ಎಚ್ಚರಿಕೆ ನೀಡಿದೆ.
ಆಗಸ್ಟ್ 7ರಿಂದ ಆಗಸ್ಟ್ 9ರ ವರೆಗೆ ರೆಡ್ ಅಲರ್ಟ್ ಘೋಷಿಸಿರುವ ಹವಾಮಾನ ಇಲಾಖೆ, ಮುಂದಿನ ಮೂರು ನಾಲ್ಕು ದಿನಗಳಲ್ಲಿ 204 ಮಿ.ಮೀ.ಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.
ಅರಬ್ಬಿ ಸಮುದ್ರದಲ್ಲಿ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವುದರೊಂದಿಗೆ ಅಲೆಗಳಬ್ಬರ ಜೋರಾಗಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕಿಳಿಯಬಾರದೆಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ರಾಜ್ಯದಲ್ಲಿ ಮುಂಗಾರು ಚುರುಕಾಗಿದೆ. ಮಳೆ ಕೊರತೆಯ ಪ್ರಮಾಣ ಕಡಿಮೆಯಾಗುತ್ತಿದೆ. ರಾಜ್ಯದ ಬಹುತೇಕ ಭಾಗಗಳಲ್ಲಿ ಮೂರು ನಾಲ್ಕು ದಿನ ಮಳೆ ಮುಂದುವರಿಯಲಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಜಿ.ಎಸ್.ಶ್ರೀನಿವಾಸರೆಡ್ಡಿ ಅವರು ತಿಳಿಸಿದ್ದಾರೆ.