ಬೆಂಗಳೂರು: ದೇಶದ ವಿವಿಧ ರಾಜ್ಯಗಳಲ್ಲಿಯೂ ಅತಿವೃಷ್ಟಿ ಹಾಗೂ ಪ್ರವಾಹ ಪರಿಸ್ಥಿತಿ ಕಂಡು ಬಂದಿದೆ. ಮಹಾರಾಷ್ಟ್ರ, ಕೇರಳ, ಗುಜರಾತ್ ರಾಜ್ಯಗಳಲ್ಲಿ ಭೀಕರ ಪ್ರವಾಹ ಎದುರಾಗಿದೆ. ಹೀಗಾಗಿ ರಾಷ್ಟ್ರೀಯ ವಿಪತ್ತು ನಿಧಿ ಅನುದಾನ ಹಂಚಿಕೆಯಲ್ಲಿ ತಡವಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕೇಂದ್ರದ ಧೋರಣೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಸಂಜೆ ನವದೆಹಲಿಗೆ ತೆರಳಿತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ನಾಳೆ ಬೆಳಗ್ಗೆ ತಮಗೆ ಸಮಯಾವಕಾಶ ನೀಡಿದ್ದಾರೆ ಎಂದರು.
ಪ್ರಧಾನಿ ಭೇಟಿ ವೇಳೆ ರಾಜ್ಯದ ನೆರೆ, ಅತಿವೃಷ್ಟಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಪರಿಹಾರ ಹಂಚಿಕೆ ಬಗ್ಗೆ, ಅಭಿವೃದ್ದಿ ಕೆಲಸಕ್ಕೆ ಅಗತ್ಯವಿರುವ ಅನುದಾನದ ಬಗ್ಗೆಯೂ ಚರ್ಚೆ ಮಾಡುತ್ತೇನೆ. ಅಂತೆಯೇ ಕೇಂದ್ರ ಸಚಿವರನ್ನು ಭೇಟಿ ಮಾಡಿ ರಾಜ್ಯದ ಯೋಜನೆಗಳಿಗೆ ಅಗತ್ಯ ಮಂಜೂರಾತಿ ಪಡೆಯುತ್ತೇನೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಎರಡು ದಿನಗಳ ಕಾಲ ದೆಹಲಿಯಲ್ಲಿವೇ ವಾಸ್ತವ್ಯ ಹೂಡಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನೂ ಭೇಟಿ ಮಾಡಿ ರಾಜ್ಯಕ್ಕೆ ಅಗತ್ಯ ನೆರವು ಕೋರಲಾಗುವುದು. ಅಲ್ಲದೆ ಸಚಿವ ಸಂಪುಟ ರಚನೆ, ಸಚಿವ ಸಂಪುಟ ಸೇರಲಿರುವವರ ಪಟ್ಟಿಗೂ ಅನುಮೋದನೆ ಪಡೆಯಲಾಗುವುದು ಎಂದು ಸಿಎಂ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
Advertisement