ತುಮಕೂರು: ಒಂಟಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ಮನೆಯ ಮಾಲೀಕನನ್ನು ಬರ್ಬರವಾಗಿ ಹತ್ಯೆ ಮಾಡಿ ವಿಕಲಚೇತನ ಮಗನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಮಧುಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮಧುಗಿರಿ- ಗೌರಿಬಿದನೂರು ರಸ್ತೆಯ ಮರಹಳ್ಳಿ ಗೇಟ್ನಲ್ಲಿ ಒಂಟಿ ಮನೆಯಲ್ಲಿ ವಾಸವಾಗಿದ್ದ ಚೌಡಯ್ಯ (70) ಕೊಲೆಯಾದ ವ್ಯಕ್ತಿಯಾಗಿದ್ದು, ಇವರ ಮಗ ವಿಕಲಚೇತನ ಹನುಮಂತರಾಜು (35) ಗಂಭೀರ ಗಾಯಗೊಂಡು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮನೆಯಲ್ಲಿ ತಂದೆ-ಮಗ ಇಬ್ಬರೇ ವಾಸವಾಗಿದ್ದರು. ಜೀವನೋಪಾಯಕ್ಕಾಗಿ ಮನೆಗೆ ಹೊಂದಿಕೊಂಡಂತೆ ಚಿಲ್ಲದೆ ಅಂಗಡಿ ಇಟ್ಟುಕೊಂಡಿದ್ದರು. ಈ ಅಂಗಡಿಯಲ್ಲಿ ಅಕ್ರಮ ಮದ್ಯ ಸರಬರಾಜು ಮಾಡಲಾಗುತ್ತಿತ್ತು ಎನ್ನಲಾಗಿದೆ.
ರಾತ್ರಿ ದುಷ್ಕರ್ಮಿಗಳು ಮದ್ಯ ಪಡೆದು ಹಣ ಕೊಡದೆ ಚೌಡಯ್ಯ ಅವರೊಂದಿಗೆ ವಾಗ್ವಾದ ನಡೆಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಅಲ್ಲದೆ ತಮ್ಮನ್ನು ಗುರುತಿಸಬಹುದೆಂಬ ಉದ್ದೇಶದಿಂದ ವಿಕಲಚೇತನ ಹನುಮಂತರಾಜು ಮೇಲೂ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.
ಸುದ್ದಿ ತಿಳಿದ ಸಬ್ ಇನ್ಸ್ಪೆಕ್ಟರ್ ಕಾಂತರಾಜು, ಸರ್ಕಲ್ ಇನ್ಸ್ಪೆಕ್ಟರ್ ದಯಾನಂದ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಣಕ್ಕಾಗಿ ಕೊಲೆ ಮಾಡಿರುವ ಸಾಧ್ಯತೆ ಇದೆ. ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ.
Advertisement