ಬೆಂಗಳೂರು: ಕಲಬುರಗಿಯ ಐತಿಹಾಸಿಕ ಕೋಟೆ ವ್ಯಾಪ್ತಿಯಲ್ಲಿನ ಒತ್ತುವರಿ ತೆರವುಗೊಳಿಸಲು 15 ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗೆ ಹೈಕೋರ್ಟ್ ಆದೇಶಿಸಿದೆ.
ಒತ್ತುವರಿದಾರರನ್ನು ತೆರವು ಎಂದು ಕೋರಿ ಎಂ.ಎಸ್.ಶರಣ್ ದೇಸಾಯಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಮಳಿಮಠ್ ಹಾಗೂ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ಈ ಆದೇಶ ನೀಡಿತು.
ವಿಚಾರಣೆ ವೇಳೆ ಕೇಂದ್ರ ಸರ್ಕಾರದ ಪರ ಹಾಜರಿದ್ದ ಸಹಾಯಕ ಸಾಲಿಸಿಟರ್ ಜನರಲ್ , ಒತ್ತುವರಿ ತೆರವುಗೊಳಿಸಲು ಸರ್ವೇಕ್ಷಣಾ ಮತ್ತು ಪುರಾತತ್ವ ಇಲಾಖೆ ಈಗಾಗಲೇ ನೋಟಿಸ್ ನೀಡಿದೆ. ನೋಟಿಸ್ ಅನ್ವಯ ಹದಿನೈದು ದಿನಗಳಲ್ಲಿ ತೆರವುಗೊಳಿಸಬೇಕು ಎಂದು ತಿಳಿಸಿತ್ತು. ಆದರೆ, ಇನ್ನೂ ತೆರವುಗೊಳಿಸಿಲ್ಲ ಎಂದು ವಿವರಿಸಿದರು.
ಮಾಹಿತಿ ಹಕ್ಕು ಕಾಯ್ದೆ ಅಡಿ 2011ರಲ್ಲಿ ಪಡೆದುಕೊಂಡಿರುವ ಮಾಹಿತಿಯಂತೆ ಕಲಬುರ್ಗಿ ಕೋಟೆಯ ಒಳಗೆ ಮತ್ತು ಹೊರಗೆ 194 ಕುಟುಂಬಗಳು ಜಮೀನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ನೆಲೆಸಿವೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದರು.
Advertisement