ಕೆಆರ್​ಎಸ್​ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಲು ಸರ್ಕಾರ ಸಿದ್ಧ- ಸಚಿವ ಆರ್.ಅಶೋಕ್​​

ಕೆಆರ್​​ಎಸ್ ಅಣೆಕಟ್ಟೆ ಭದ್ರತೆ ದೃಷ್ಟಿಯಿಂದ ವೈಜ್ಞಾನಿಕ ಅಧ್ಯಯನ ನಡೆಸಿ ಸಂಪೂರ್ಣವಾಗಿ ಕಲ್ಲು ಗಣಿಗಾರಿಕೆ ನಿಲ್ಲಿಸಲು ಸರ್ಕಾರ ಬದ್ಧವಾಗಿದೆ ಎಂದು ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ್ ಹೇಳಿದ್ದಾರೆ
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮಂಡ್ಯ: ಕೆಆರ್​​ಎಸ್ ಅಣೆಕಟ್ಟೆ ಭದ್ರತೆ ದೃಷ್ಟಿಯಿಂದ ವೈಜ್ಞಾನಿಕ ಅಧ್ಯಯನ ನಡೆಸಿ ಸಂಪೂರ್ಣವಾಗಿ ಕಲ್ಲು ಗಣಿಗಾರಿಕೆ ನಿಲ್ಲಿಸಲು ಸರ್ಕಾರ ಬದ್ಧವಾಗಿದೆ ಎಂದು ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ್ ಹೇಳಿದ್ದಾರೆ. 

ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗೆ ಸಭೆಯಲ್ಲೇ ಸೂಚನೆ ನೀಡಿದ ಸಚಿವರು, ಶೀಘ್ರವಾಗಿ ವೈಜ್ಞಾನಿಕವಾಗಿ ಅಧ್ಯಯನ ನಡೆಸಬೇಕು. ಈ ಬಗ್ಗೆ ವರದಿ ನೀಡಿದರೆ, ಕೂಡಲೇ ಕೆಆರ್​ಎಸ್ ಸುತ್ತಮುತ್ತ ನಡೆಯುತ್ತಿರುವ ಕಲ್ಲು ಗಣಿಗಾರಿಕೆ ನಿಷೇಧ ಮಾಡಲಾಗುವುದು ಎಂದು ಘೋಷಣೆ ಮಾಡಿದರು.

ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿರುವುದರಿಂದ ಅವಶ್ಯಕ ಸ್ಥಳಗಳಲ್ಲಿ ಚೆಕ್ ಪೋಸ್ಟ್ ಪ್ರಾರಂಭ ಮಾಡಿ, ಕಳ್ಳರನ್ನು ಹಿಡಿಯಬೇಕು ಎಂದು ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು. 

ಗ್ರಾಮ ಲೆಕ್ಕಿಗರು ಸರ್ಕಾರಿ ಆದೇಶದಂತೆ ಬೆಳಗ್ಗೆ 11 ಗಂಟೆಯಿಂದ ಸಂಜೆ 5 ಗಂಟೆವರೆಗೂ ತಮ್ಮ ಸೇವಾ ವ್ಯಾಪ್ತಿಯಲ್ಲೇ ಕೆಲಸ ನಿರ್ವಹಿಸಬೇಕು. ಅವಶ್ಯಕತೆ ಇದ್ದರೆ ಜಿಲ್ಲಾ ಕೇಂದ್ರ, ತಾಲೂಕು ಕೇಂದ್ರಕ್ಕೂ ಬರಬೇಕು.ಇಲ್ಲವಾದರೆ ಕಾನೂನು ರೀತಿ ಕ್ರಮ ಕೈಗೊಳ್ಳುವುದಾಗಿ ಸಚಿವರು ಎಚ್ಚರಿಕೆ ನೀಡಿದರು.

ಡಿಸೆಂಬರ್ 26ರಿಂದ ಜಿಲ್ಲೆಯಲ್ಲಿ ಭತ್ತ ಖರೀದಿಗೆ ನೋಂದಣಿ ಆರಂಭ ಆಗಲಿದ್ದು, ರೈತರು ನೋಂದಣಿ ಮಾಡಿಸಿಕೊಳ್ಳುವಂತೆ ಮನವಿ ಮಾಡಿದರು. ಶ್ರೀರಂಗಪಟ್ಟಣ ಕ್ಷೇತ್ರ ಹೊರತುಪಡಿಸಿದರೆ ಎಲ್ಲ 5 ಕ್ಷೇತ್ರಗಳ ಜೆಡಿಎಸ್ ಶಾಸಕರು ಇಂದು ಪ್ರಗತಿ ಪರಿಶೀಲನಾ ಸಭೆಗೆ ಆಗಮಿಸಿದ್ದು, ವಿಶೇಷವಾಗಿತ್ತು. ಎಲ್ಲರೂ ತಮ್ಮ ತಮ್ಮ ಕ್ಷೇತ್ರಗಳ ಸಮಸ್ಯೆ ಬಗ್ಗೆ ಸಚಿವರ ಗಮನ ಸೆಳೆದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com