ಬೆಂಗಳೂರು: ರಾಮನಗರ ಜಿಲ್ಲೆ ಕನಕಪುರ ತಾಲೂಕು ಉಯ್ಯಂಬಳ್ಳಿ ಕಪಾಲಿ ಬೆಟ್ಟ ಈಗ ದೊಡ್ಡದಾಗಿ ಸದ್ದು ಮಾಡುತ್ತಿದೆ. ಸರ್ಕಾರಿ ಗೋಮಾಳದಲ್ಲಿ ಯೇಸು ಪ್ರತಿಮೆ ನಿರ್ಮಾಣಕ್ಕೆ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರು ಶೀಲಾನ್ಯಾಸ ನೇರವೇರಿಸಿದ್ದೆ ಈಗ ವಿವಾದ ಆಗಿದೆ.
ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ ಅವರನ್ನು ಓಲೈಸಲು ಗೋಮಾಳ ಜಮೀನು ಕೊಟ್ಟು ಯೇಸು ಪ್ರತಿಮೆ ನಿರ್ಮಾಣಕ್ಕೆ ಕೈಹಾಕಿದ್ದಾರೆ ಎಂದು ಬಿಜೆಪಿ ನಾಯಕರು ಟೀಕಿಸಿದ್ದಾರೆ.
‘ಸಿದ್ದರಾಮಯ್ಯ ನೇತೃತ್ವದಕಾಂಗ್ರೆಸ್ ಸರ್ಕಾರ ನೀಡಿದ್ದ ಸರ್ಕಾರಿ ಗೋಮಾಳ ಜಮೀನಿನಲ್ಲಿ ಪ್ರತಿಮೆ ಸ್ಥಾಪನೆ ಮಾಡುತ್ತಿರುವುದು ಸರಿಯಲ್ಲ. ಅದನ್ನು ವಾಪಸ್ ಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ನಲ್ಲಹಳ್ಳಿ ಗ್ರಾಮದ ಸರ್ವೆ ಸಂಖ್ಯೆ 283 ರಲ್ಲಿ 231 ಎಕರೆ 35 ಗುಂಟೆ ಗೋಮಾಳ ಜಮೀನು ಇದೆ. ಇದರಲ್ಲಿ 10 ಎಕರೆಯನ್ನು ಪ್ರತಿಮೆ ನಿರ್ಮಾಣಕ್ಕೆ ನೀಡಲಾಗಿದೆ. ಇಲಾಖೆ ಮಾಹಿತಿಯ ಪ್ರಕಾರ ಈ ಪ್ರದೇಶದಲ್ಲಿ 2 ಸಾವಿರಕ್ಕೂ ಹೆಚ್ಚು ಜಾನುವಾರುಗಳಿದ್ದು, ಒಟ್ಟು 548 ಎಕರೆ ಗೋಮಾಳದ ಜಮೀನು ಮೀಸಲಿಡಬೇಕು’ ಎಂದು ಅಶೋಕ ಸುದ್ದಿಗಾರರಿಗೆ ಶುಕ್ರವಾರ ತಿಳಿಸಿದರು.
‘ಕಾಂಗ್ರೆಸ್ ಸರ್ಕಾರ, 2017ರಲ್ಲಿ ಶೇ 10 ರಷ್ಟು ಮಾರ್ಗಸೂಚಿ ದರ ವಿಧಿಸಿ ಜಮೀನು ನೀಡಲು ತೀರ್ಮಾನಿಸಿತ್ತು. ಶೇ 10 ರಷ್ಟು ಹಣ ನೀಡಲು ಸಾಧ್ಯವಿಲ್ಲ. ಅದನ್ನು ಮನ್ನಾ ಮಾಡಬೇಕು ಎಂದು ಹಾರೋಬೆಲೆ ಕಪಾಲಿ ಬೆಟ್ಟ ಅಭಿವೃದ್ಧಿ ಟ್ರಸ್ಟ್ ಸರ್ಕಾರಕ್ಕೆ ಮನವಿ ಮಾಡಿತ್ತು. ಸರ್ಕಾರಿ ಗೋಮಾಳ ಜಮೀನು ಬೇಕಾಬಿಟ್ಟಿದಾನ ಮಾಡಲು ಅದು ಶಿವಕುಮಾರ್ ಅವರ ಖಾಸಗಿ ಆಸ್ತಿ ಅಲ್ಲ’ ಎಂದೂ ಹೇಳಿದರು. ಈ ಸಂಬಂಧ ರಾಮನಗರ ಜಿಲ್ಲಾಧಿಕಾರಿಯಿಂದ ವರದಿ ಕೇಳಿದ್ದು, ಎಲ್ಲದಕ್ಕೂ ಸ್ಪಷ್ಟತೆ ಸಿಗುವವರೆಗೂ ಯಾವುದೇ ಕಾರ್ಯಕ್ಕೂ ಅನುಮತಿ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.
Advertisement