ಬೆಂಗಳೂರು: 'ವಕೀಲರ ರಕ್ಷಣೆ ಕಾಯ್ದೆ' ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬಾರ್ ಕೌನ್ಸಿಲ್ ಆಫ್ ಇಂಡಿಯಾ ಮಂಗಳವಾರ ದೇಶಾದ್ಯಂತ ಪ್ರತಿಭಟನೆ ನಡೆಸಿದ್ದು, ಬೆಂಗಳೂರಿನಲ್ಲೂ ವಕೀಲರು ಕೋರ್ಟ್ ಕಲಾಪದಿಂದ ಹೊರಗುಳಿಯುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬಾರ್ ಕೌನ್ಸಿಲ್ ಆಫ್ ಇಂಡಿಯಾ ನೀಡಿರುವ ಪ್ರತಿಭಟನಾ ಕರೆಗೆ ಬೆಂಗಳೂರು ವಕೀಲರ ಸಂಘ ಬೆಂಬಲ ಸೂಚಿಸಿ ಇಂದು ನಗರದಲ್ಲಿ ಪ್ರತಿಭಟನೆ ನಡೆಸಿತು.
ಕೋರ್ಟ್ ಕಲಾಪಗಳಿಂದ ಹೊರಗುಳಿದ ವಕೀಲರು ಸಿಟಿ ಸಿವಿಲ್ ಕೋರ್ಟ್ ನಿಂದ ರಾಜಭವನದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರ ವಕೀಲರ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದ್ದು, ಬಜೆಟ್ ನಲ್ಲಿ ವಕೀಲರಿಗೆ ಯಾವುದೇ ಸೌಲಭ್ಯ ನೀಡದೇ ತಮ್ಮನ್ನು ತಿರಸ್ಕರಿಸಿದೆ ಎಂದು ಆರೋಪಿಸಿ ಶಾಂತಿಯುತ ಪ್ರತಿಭಟನೆ ನಡೆಸಿದರು.