ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಸಾಹಿತಿ ಕೋ.ಚನ್ನಬಸಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಕೋ.ಚನ್ನಬಸಪ್ಪ ಅವರು ವೃತ್ತಿಯಿಂದ ವಕೀಲ, ನ್ಯಾಯಾಧೀಶರಾದರೂ ಪ್ರವೃತ್ತಿಯಿಂದ ಸಾಹಿತಿಯಾಗಿ ಕನ್ನಡ ಸಾಹಿತ್ಯಕ್ಕೆ ನೀಡಿದ ಕೊಡುಗೆ ಅವಿಸ್ಮರಣೀಯ. ಕುವೆಂಪು ಅವರಿಗೆ ಅತಿ ಆಪ್ತರಾಗಿದ್ದ ಕೋ ಚೆ. ಅವರು ಶ್ರೀ ರಾಮಾಯಣ ದರ್ಶನಂ ಮಹಾ ಕಾವ್ಯ ಸಮೀಕ್ಷೆ ಹಾಗೂ ಹಲವಾರು ಮಹತ್ವದ ಕೃತಿಗಳನ್ನು ರಚಿಸಿದ್ದಾರೆ.
ಇವರ ನಿಧನದಿಂದ ಕನ್ನಡ ಸಾಂಸ್ಕೃತಿಕ ಲೋಕಕ್ಕೆ ತುಂಬಲಾರದ ನಷ್ಟ ಎಂದು ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, “ಸಾಹಿತಿ, ನಿವೃತ್ತ ನ್ಯಾಯಮೂರ್ತಿ ಕೋ. ಚನ್ನಬಸಪ್ಪ ನಿಧನದಿಂದ ದುಃಖವಾಗಿದೆ. ಕನ್ನಡ ಸಾರಸ್ವತ ಲೋಕಕ್ಕೆ ಹಲವು ಕಥೆ, ಕಾದಂಬರಿಗಳು ಮತ್ತು ವಿಮರ್ಶಾ ಗ್ರಂಥಗಳನ್ನು ನೀಡಿರುವ ಶ್ರೀಯುತರ ನಿಧನದಿಂದ ಕನ್ನಡ ನಾಡಿಗೆ, ಸಾಹಿತ್ಯಾಭಿಮಾನಿಗಳಿಗೆ ತುಂಬಲಾರದ ನಷ್ಟವಾಗಿದೆ” ಎಂದು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.