ಜೂನ್ 21ರಂದು ಗುರುಮಿಟ್ಕಲ್ ತಾಲ್ಲೂಕಿನಲ್ಲಿ ಸಿಎಂ ಗ್ರಾಮ ವಾಸ್ತವ್ಯ ಪುನಾರಂಭ

ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ತಮ್ಮ ಗ್ರಾಮ ವಾಸ್ತವ್ಯವನ್ನು ಮೊದಲ ಹಂತದಲ್ಲಿ ಯಾದಗಿರಿ ಮತ್ತು ಕಲಬುರಗಿಯಲ್ಲಿ...
ಎಚ್ ಡಿ ಕುಮಾರಸ್ವಾಮಿ
ಎಚ್ ಡಿ ಕುಮಾರಸ್ವಾಮಿ
ಬೆಂಗಳೂರು: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ತಮ್ಮ ಗ್ರಾಮ ವಾಸ್ತವ್ಯವನ್ನು ಮೊದಲ ಹಂತದಲ್ಲಿ ಯಾದಗಿರಿ ಮತ್ತು ಕಲಬುರಗಿಯಲ್ಲಿ ಕೈಗೊಳ್ಳಲಿದ್ದಾರೆ. 
ಜೂನ್ 21ರಂದು ಯಾದಗಿರಿ ಜಿಲ್ಲೆಯ ಗುರುಮಿಟ್ಕಲ್ ತಾಲ್ಲೂಕಿನಲ್ಲಿ ಹಾಗೂ ಜೂನ್ 22 ರಂದು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನಲ್ಲಿ ಗ್ರಾಮ ವಾಸ್ತವ್ಯ ಹೂಡಲಿದ್ದಾರೆ. 
ಅಂತೆಯೇ ಜುಲೈ 5 ಹಾಗೂ 6 ರಂದು ಬೀದರ್ ಜಿಲ್ಲೆ ಬಸವಕಲ್ಯಾಣ ಹಾಗೂ ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕುಗಳಲ್ಲೂ ಗ್ರಾಮ ವಾಸ್ತವ್ಯಕ್ಕೆ ದಿನಾಂಕ ನಿಗದಿಯಾಗಿದೆ. ಈ ಮೊದಲು ಕುಮಾರ ಸ್ವಾಮಿ ಅವರು ಕೊಡಗು ಜಿಲ್ಲೆಯಲ್ಲಿ ಗ್ರಾಮ ವಾಸ್ತವ್ಯ ಹೂಡಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಇದೀಗ ಕುಮಾರಸ್ವಾಮಿ ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ವಿಸ್ತರಿಸಿದ್ದಾರೆ. 
ಮುಖ್ಯಮಂತ್ರಿಗಳು ತಾವು ಪ್ರಾರಂಭಿಸಲು ಉದ್ದೇಶಿಸಿರುವ ಗ್ರಾಮ ವಾಸ್ತವ್ಯದ ಕುರಿತು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳ ಜತೆ ಸಭೆ ನಡೆಸಿ ಚರ್ಚಿಸಿದರು. 
ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಗ್ರಾಮ ವಾಸ್ತವ್ಯವನ್ನು ಮುಖ್ಯಮಂತ್ರಿಗಳು ಪ್ರಾರಭಿಸುತ್ತಿರುವ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಸರ್ಕಾರದ ಆಡಳಿತ ಚುರುಕುಗೊಳಿಸಲು ಮತ್ತು ಸರ್ಕಾರದ ಯೋಜನೆಗಳ ಅನುಷ್ಠಾನ ಕುರಿತು ಜನಾಭಿಪ್ರಾಯ ಪಡೆಯಲು ಇದು ಉತ್ತಮ ಅವಕಾಶ ಎಂದು ಅಭಿಪ್ರಾಯಪಟ್ಟರು.
ತಮ್ಮ ಸಚಿವಾಲಯದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಅವರು, ಜೂನ್ 21 ರಂದು ಯಾದಗಿರಿ ಜಿಲ್ಲೆ ಗುರುಮಿಟ್ಕಲ್ ತಾಲ್ಲೂಕಿನಲ್ಲಿ ಗ್ರಾಮ ವಾಸ್ತವ್ಯ ನಡೆಸುವುದಾಗಿ ತಿಳಿಸಿದರು.
ಈ ಗ್ರಾಮ ವಾಸ್ತವ್ಯದ ಸ್ವರೂಪ ಹೇಗಿರಬೇಕು ಎಂಬ ಕುರಿತು ಸಭೆಯಲ್ಲಿ ಪ್ರಮುಖವಾಗಿ ಚರ್ಚಿಸಲಾಯಿತು. ತಾವು ವಾಸ್ತವ್ಯ ಹೂಡಲಿರುವ ಗ್ರಾಮಗಳು, ಆಸುಪಾಸಿನ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡುವಂತೆಯೂ ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು. 
ಸಭೆಯಲ್ಲಿ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಡಾ. ಎಸ್. ಸುಬ್ರಹ್ಮಣ್ಯ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ. ಈ. ವಿ. ರಮಣ ರೆಡ್ಡಿ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಮುಖ್ಯಮಂತ್ರಿ ಗಳ ಕಾರ್ಯದರ್ಶಿ ಡಾ. ಎಸ್. ಸೆಲ್ವಕುಮಾರ್ ಹಾಗೂ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com