ರಾಜ್ಯ
ಬೆಂಗಳೂರು ಜಲಮಂಡಳಿ ಟ್ಯಾಂಕ್ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರು. ಪರಿಹಾರ ಘೋಷಣೆ
ಬೆಂಗಳೂರು ಜಲ ಮಂಡಳಿಯ ನಿರ್ಮಾಣ ಹಂತದ ನೀರಿನ ಟ್ಯಾಂಕರ್ ನ ಸೆಂಟ್ರಿಂಗ್ ಕುಸಿತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ...
ಬೆಂಗಳೂರು: ಬೆಂಗಳೂರು ಜಲ ಮಂಡಳಿಯ ನಿರ್ಮಾಣ ಹಂತದ ನೀರಿನ ಟ್ಯಾಂಕರ್ ನ ಸೆಂಟ್ರಿಂಗ್ ಕುಸಿತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 5 ಲಕ್ಷ ರು. ಪರಿಹಾರ ಘೋಷಿಸಿದೆ.
ಇಂದು ಬೆಳಗ್ಗೆ 11.15ರ ಸುಮಾರಿಗೆ ನಾಗಾವರದ ಲುಂಬಿನಿ ಗಾರ್ಡನ್ ಬಳಿ ಈ ದುರುಂತ ನಡೆದಿದ್ದು, ಘಟನೆಯಲ್ಲಿ ಮೂವರು ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.
ಘಟನೆ ಬಳಿಕ ಗಾಯಾಳುಗಳನ್ನು ದಾಖಲಿಸಲಾಗಿರುವ ಆಸ್ಟರ್ ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಕೃಷ್ಣ ಬೈರೇಗೌಡ ಅವರು ಮೃತರ ಕುಟುಂಬಕ್ಕೆ ತಲಾ ಐದು ಲಕ್ಷ ರುಪಾಯಿ ಪರಿಹಾರ ಘೋಷಿಸಿದರು.
ಬೆಂಗಳೂರು ಜಲಮಂಡಳಿಯಿಂದಲೇ ಪರಿಹಾರ ಧನ ಹಾಗೂ ಚಿಕಿತ್ಸೆ ವೆಚ್ಚ ಭರಿಸುತ್ತೇವೆ. ಈ ತನಕ ಒಟ್ಟು ಮೂರು ಸಾವು ಖಚಿತವಾಗಿದೆ. ಅವಘಡಕ್ಕೆ ಗುತ್ತಿಗೆದಾರರೇ ಕಾರಣ. ನಷ್ಟವನ್ನ ಗುತ್ತಿಗೆದಾರರಿಂದಲೇ ವಸೂಲಿ ಮಾಡುತ್ತೇವೆ ಎಂದು ಸಚಿವರು ತಿಳಿಸಿದ್ದಾರೆ.
ಉಪ ಮುಖ್ಯಮಂತ್ರಿಗಳ ಜೊತೆ ಮಾತನಾಡಿ ಗಾಯಾಳುಗಳ ಚಿಕಿತ್ಸಾ ವೆಚ್ಚ ಭರಿಸುತ್ತೇವೆ, ಆಸ್ಟರ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಪೈಕಿ ಒಬ್ಬರು ಮೃತಪಟ್ಟಿದ್ದಾರೆ. ಒಬ್ಬರನ್ನ ಐಸಿಯುಗೆ ದಾಖಲಿಸಲಾಗಿದೆ ಎಂದರು.
ಇನ್ನುಳಿದವರನ್ನು ಸೋಮವಾರವೇ ಡಿಸ್ಚಾರ್ಜ್ ಮಾಡಲಾಗುತ್ತದೆ. ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ ಅನ್ನೋ ಮಾಹಿತಿ ಇದೆ. ಗುತ್ತಿಗೆದಾರರ ನಿರ್ಲಕ್ಷ್ಯಕ್ಕೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಕೃಷ್ಣ ಬೈರೇಗೌಡ ಭರವಸೆ ನೀಡಿದರು.