ಬೆಂಗಳೂರು: ಬೀದಿ ನಾಯಿಗಳ ದಾಳಿಗೆ ಸಿಲುಕಿ ಐದು ವರ್ಷದ ಬಾಲಕನೊಬ್ಬ ಮೃತಪಟ್ಟ ದಾರುಣ ಘಟನೆ ಬೆಂಗಳೂರಿನನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅಜ್ಜೇಗೌಡನ ಪಾಳ್ಯದಲ್ಲಿ ನಡೆದಿದೆ.
ಮೃತ ಬಾಲಕ ಕಲ್ಬುರ್ಗಿ ಜಿಲ್ಲೆಯ ಸೇಡಂ ತಾಲೂಕಿನ ದುರ್ಗೇಶ್ ಎಂದು ಗುರುತಿಸಲಾಗಿದ್ದು, ಬಾಲಕನ ತಂದೆ ಮಲ್ಲಪ್ಪ ಹಾಗೂ ತಾಯಿ ಅನಿತಾ ಕೂಲಿ ಕಾರ್ಮಿಕರಾಗಿದ್ದು, ಅವರು ನಿರ್ಮಾಣ ಹಂತದ ಕಟ್ಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಮಗ ನಾಯಿಗಳ ದಾಳಿಗೆ ತುತ್ತಾಗಿದ್ದಾರೆ.
ಇಂದು ಮಧ್ಯಾಹ್ನ ಸುಮಾರು ಎಂಟು ನಾಯಿಗಳು ಬಾಲಕನ ಮೇಲೆ ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ದುರ್ಗೇಶ್ ತಾಯಿ ಕಟ್ಟಡ ನಿರ್ಮಾಣ ಕೂಲಿ ಕೆಲಸ ಮಾಡುತ್ತಿದ್ದರು. ಪ್ರತಿನಿತ್ಯ ಬಾಲಕ ತಾಯಿಯೊಂದಿಗೆ ಹೋಗುತ್ತಿದ್ದ. ಅದರಂತೆ ಇಂದು ಕೂಡ ತಾಯಿ ಜೊತೆಗೆ ಬಾಲಕ ಹೋಗಿದ್ದಾನೆ. ಆಟವಾಡುವಾಗ ಬಾಲಕ ಸಮೀಪದ ತೋಪಿನ ಬಳಿ ಹೋದಾಗ ಏಳೆಂಟು ಬೀದಿ ನಾಯಿಗಳು ದಾಳಿ ನಡೆಸಿವೆ.
ಈ ಸಂಬಂಧ ಸೋಲದೇವನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.