ದೆಹಲಿಯಲ್ಲಿ ನಡೆದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ನಿರ್ಣಯ ತೆಗೆದುಕೊಳ್ಳಲಾಗಿದ್ದು, ಮಳೆ ಬಂದರೆ ಮಾತ್ರ ತಮಿಳುನಾಡಿಗೆ ನೀರು ಬಿಡಿ ಎಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸೂಚನೆ ನೀಡಿದೆ. ಸಭೆಯಲ್ಲಿ ಕರ್ನಾಟಕ, ತಮಿಳುನಾಡು, ಕೇರಳ, ಪುದುಚೇರಿ ಮತ್ತು ಕೇಂದ್ರ ಸರ್ಕಾರದ ಪ್ರತಿನಿಧಿಗಳು ಭಾಗಿಯಾಗಿದ್ದರು. ಜುಲೈ ತಿಂಗಳ ನೀರನ್ನೂ ಬಿಡುವಂತೆ ತಮಿಳುನಾಡು ಬೇಡಿಕೆಯಿಟ್ಟಿತ್ತು. ತಮಿಳುನಾಡು ಒಟ್ಟು 40.43 ಟಿಎಂಸಿ ನೀರು ಕೇಳಿತ್ತು. ಜೂನ್ ತಿಂಗಳ 9.19, ಜುಲೈ ತಿಂಗಳ 31.24 ಟಿಎಂಸಿ ನೀರು ಬಿಡುವಂತೆ ಕೋರಿತ್ತು. ಆದರೆ ಕಾವೇರಿ ಕೊಳ್ಳದಲ್ಲಿ ಮುಂಗಾರು ಮಳೆ ಆಗಿಲ್ಲ. ಮಳೆ ಇಲ್ಲದ ಕಾರಣ ಜಲಾಶಯಗಳಲ್ಲಿ ಸಾಕಷ್ಟು ಪ್ರಮಾಣದ ನೀರಿಲ್ಲ. ರಾಜ್ಯದಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಸೃಷ್ಟಿಯಾಗಿದೆ. ಹೀಗಾಗಿ ಪ್ರಸ್ತುತ ನೀರು ಬಿಡಲು ಸಾಧ್ಯವಿಲ್ಲ ಎಂದು ಪ್ರಾಧಿಕಾರಕ್ಕೆ ಕರ್ನಾಟಕ ಮನವರಿಕೆ ಮಾಡಿಕೊಟ್ಟಿತ್ತು.