ಬೆಂಗಳೂರು: ಜುಲೈ 12 ರಿಂದ ಜುಲೈ 26 ರವರೆಗೆ ವಿಧಾನ ಮಂಡಲದ ಮಳೆಗಾಲದ ಅಧಿವೇಶನ ನಡೆಯಲಿದೆ ಎಂದು ಸಚಿವ ಕೃಷ್ಣ ಭೈರೇಗೌಡ ಅವರು ಶುಕ್ರವಾರ ತಿಳಿಸಿದ್ದಾರೆ.
ಇಂದು ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಜುಲೈ 12ರಿಂದ 26ರವರೆಗೆ ಮುಂಗಾರು ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ ಎಂದರು.
ಎಸ್ ಟಿ ಮೀಸಲಾತಿ ಪ್ರಮಾಣ ಹೆಚ್ಚಿಸುವ ಕುರಿತು ಸಮಿತಿ ರಚನೆ ಮಾಡಬಹುದು ಅಥವಾ ಆಯೋಗ ರಚನೆ ಮಾಡಬಹುದೇ ಎಂಬುದರ ಕುರಿತು ವರದಿ ನೀಡುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಲಾಗಿದೆ ಎಂದರು.
ಇದೇ ವೇಳೆ, ರಾಜ್ಯ ಸರ್ಕಾರ ಮೋಡ ಬಿತ್ತನೆಗೆ ನಿರ್ಧರಿಸಿದ್ದು, ಜುಲೈ ಎರಡನೇ ವಾರದಲ್ಲಿ ಮೈಸೂರು ಹಾಗೂ ಹುಬ್ಬಳ್ಳಿಯಲ್ಲಿ ಮೋಡ ಬಿತ್ತನೆ ನಡೆಸಲು ತೀರ್ಮಾನಿಸಿರುವುದಾಗಿ ಸಚಿವರು ತಿಳಿಸಿದರು.