ಬೆಂಗಳೂರು: ಧರ್ಮಸ್ಥಳಲ್ಲಿ ನೀರಿನ ತೀವ್ರ ಕೊರತೆ ಹಿನ್ನೆಲೆಯಲ್ಲಿ, ಧರ್ಮಸ್ಥಳದ ಶ್ರೀ ಮಂಜುನಾಥ್ ದೇವಸ್ಥಾನದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರೊಂದಗಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಅವರು ಸೋಮವಾರ ಚರ್ಚೆ ನಡೆಸಿದ್ದಾರೆ.
ದೇವಸ್ಥಾನಕ್ಕೆ ಭೇಟಿ ನೀಡುವ ಸುಮಾರು 30 ರಿಂದ 40 ಸಾವಿರ ಭಕ್ತರು ನೀರಿನ ತೀವ್ರ ಕೊರತೆ ಎದುರಿಸುತ್ತಿದ್ದು, ಮುಖ್ಯ ಕಾರ್ಯದರ್ಶಿಗಳು ಹಾಗೂ ಹೆಗ್ಗಡೆ ಅವರು ಈ ಕುರಿತು ಚರ್ಚೆ ನಡೆಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ನೀರಿನ ಕೊರತೆ ಹಿನ್ನೆಲೆಯಲ್ಲಿ ಧರ್ಮಸ್ಥಳಕ್ಕೆ ಭೇಟಿ ಮುಂದೂಡುವಂತೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಭಕ್ತರಿಗೆ ಮನವಿ ಮಾಡಿದ್ದರಿಂದ ನೀರಿನ ಸಮಸ್ಯೆ ಬಗೆಹರಿಸಲು ಮಾತುಕತೆ ನಡೆಸಲಾಗಿದೆ.
ನೇತ್ರಾವತಿ ನದಿ ಸಂಪೂರ್ಣವಾಗಿ ಬತ್ತಿ ಹೋಗಿದ್ದು, ಈ ಭಾಗದಲ್ಲಿ ಮಳೆಯಾಗಲು ಇನ್ನೂ 10 ದಿನಗಳಾದರೂ ಬೇಕು ಎಂದು ಹವಾಮಾನ ಇಲಾಖೆ ತಿಳಿಸಿರುವುದಾಗಿ ಹೆಗ್ಗಡೆ ಪ್ರಕಟಣೆಯಲ್ಲಿ ತಿಳಿಸಿದ್ದರು.
ನೀರಿನ ತೀವ್ರ ಕೊರತೆ ಹಿನ್ನೆಲೆಯಲ್ಲಿ, ಮಳೆಗಾಲದಲ್ಲಿ ತುಂಬಿ ಹರಿಯುವ ನೇತ್ರಾವತಿ ನದಿಗೆ ಅಡ್ಡಲಾಗಿ ಇನ್ನೊಂದು ಅಣೆಕಟ್ಟು ಕಟ್ಟಿ ಬೇಸಿಗೆ ಸಲುವಾಗಿ ನೀರು ಸಂಗ್ರಹಿಸುವ ಅವಶ್ಯಕತೆ ಇದೆ ಎಂದು ಹೆಗ್ಗಡೆ ಅವರು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದರು.
ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಅವರ ನಿರ್ದೇಶನದ ಮೇರೆಗೆ ಮುಖ್ಯ ಕಾರ್ಯದರ್ಶಿಗಳು ಹೆಗ್ಗಡೆ ಅವರ ಜೊತೆ ಮಾತುಕತೆ ನಡೆಸಿದ್ದಾರೆ.