ಬೆಂಗಳೂರು: ನವೆಂಬರ್ 9ರಂದು ಅಯೋಧ್ಯೆ ತೀರ್ಪು ಪ್ರಕಟವಾಗುವ ಹಿನ್ನೆಲೆಯಲ್ಲಿ ಬೆಂಗಳೂರಿನಾದ್ಯಂತ 144 ನಿಷೇಧಾಜ್ಞೆ, ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಬಂದೋಬಸ್ಥ್ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭಾಸ್ಕರ್ ರಾವ್ ಅವರು ನಿಷೇಧಾಜ್ಞೆ ಜೊತೆಗೆ ಬೆಳಗ್ಗೆ 6ರಿಂದ ಮಧ್ಯ ಮಾರಾಟ ನಿಷೇಧಗೊಳಿಸಲಾಗಿದೆ ಎಂದರು.
ಅಹಿತಕರ ಘಟನೆ ಸಂಭವಿಸಿದಂತೆ ಎಲ್ಲೆಡೆ ಬಿಗಿ ಬಂದೋಬಸ್ಥ್ ಮಾಡಲಾಗಿದ್ದು ತೀರ್ಪು ಸಂಬಂಧ ಯಾವುದೇ ರೀತಿಯ ಸಂಭ್ರಮಾಚರಣೆ ಮಾಡದಂತೆ ಪೊಲೀಸ್ ಆಯುಕ್ತರು ಸೂಚಿಸಿದ್ದಾರೆ.
ಒಂದು ವೇಳೆ ಕಾನೂನು ಸುವ್ಯವಸ್ಥೆಗೆ ಅಡ್ಡಿ ಉಂಟು ಮಾಡಿದರೆ ಅಂತಹವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು. ಇನ್ನು ಭದ್ರತೆ ಕುರಿತಂತೆ ಬೆಂಗಳೂರು ನಗರದಲ್ಲಿ ಸಿಆರ್ಪಿಎಫ್ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದ್ದು ಸೂಕ್ಷ್ಮ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಕೈಗೊಳ್ಳಲಾಗಿದೆ.
ಇನ್ನು ಸಾಮಾಜಿಕ ಜಾಲತಾಣಗಳ ಮೇಲೂ ಪೊಲೀಸರು ಕಣ್ಣಿಟ್ಟಿದ್ದಾರೆ. ಯಾವುದೇ ಪ್ರಚೋದನಕಾರಿ ಪೋಸ್ಟ್ ಹಾಗೂ ಕಮೆಂಟ್ ಗಳನ್ನು ಹಾಕದಂತೆ ಎಚ್ಚರಿಕೆ ನೀಡಿದ್ದಾರೆ.
ವಿಡಿಯೋ ಕೃಪೆ:(ಟಿಎನ್ಐಇ) ನಾಗರಾಜ್
ಅಯೋಧ್ಯೆ ತೀರ್ಪು ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಿಗಿ ಭದ್ರತೆ-ಅಮರ್ ಕುಮಾರ್ ಪಾಂಡೆ
ಅಯೋಧ್ಯೆ ತೀರ್ಪು ನಾಳೆ ಪ್ರಕಟಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ಎಲ್ಲೆಡೆ ಬಿಗಿ ಭದ್ರತೆ ಒದಗಿಸಲಾಗಿದೆ. ಯಾವುದೇ ಅಹಿತಕರ ಘಟನೆ ಸಂಭವಿಸಿದಂತೆ ಸಾರ್ವಜನಿಕರು ಕೂಡ ಸಹಕಾರ ನೀಡಬೇಕು ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಮರ್ ಕುಮಾರ್ ಪಾಂಡೆ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನಾಳೆ ಬೆಳಗ್ಗೆ 7 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಬೆಳಗ್ಗೆ 6 ಗಂಟೆಯಿಂದ ರಾಜ್ಯಾದ್ಯಂತ ಮದ್ಯ ಮಾರಾಟದ ಮೇಲೆ ನಿಷೇಧ ಹೇರಲಾಗಿದೆ.ಯಾವುದೇ ಕಡೆ ಸಂಭ್ರಮಾಚರಣೆ, ಪ್ರತಿಭಟನೆ ಸಭೆ ನಡೆಸುವುದರ ಮೇಲೆ ನಿರ್ಬಂಧ ವಿಧಿಸಲಾಗಿದೆ ಎಂದರು.
ವಾಟ್ಸಾಪ್, ಫೇಸ್ಬುಕ್, ಟ್ವಿಟರ್ ಸೇರಿ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇಡಲಾಗಿದೆ. ಪ್ರತಿ ಜಿಲ್ಲೆಯಲ್ಲೂ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ ಅಲ್ಲಿಗೆ ಹೆಚ್ಚಿನ ಪಡೆಯನ್ನು ರವಾನಿಸಲಾಗಿದೆ ಎಂದು ತಿಳಿಸಿದರು.
Advertisement