ಮೈಸೂರು: ಮಾರಣಾಂತಿಕ ಹಲ್ಲೆಗೊಳಗಾಗಿರುವ ನರಸಿಂಹ ರಾಜ ಕ್ಷೇತ್ರದ ಶಾಸಕ, ಮಾಜಿ ಸಚಿವ ತನ್ವೀರ್ ಸೇಠ್ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಪ್ರಕರಣ ಸಂಬಂಧ ಆರೋಪಿ ಸೇರಿ ನಾಲ್ವರನ್ನು ಪೊಲೀಸರು ಸೋಮವಾರ ಬಂಧನಕ್ಕೊಳಪಡಿಸಿದ್ದಾರೆ.
ವಿವಾಹ ಸಮಾರಂಭವೊಂದರಲ್ಲಿ ಭಾಗವಹಿಸಿದ್ದ ತನ್ವೀರ್ ಸೇಠ್ ಮೇಲೆ ಯುವಕನೊಬ್ಬ ಏಕಾಏಕಿ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದ. ಈ ಘಟನೆ ಇಡೀ ಮೈಸೂರು ಜನತೆಯನ್ನು ಬೆಚ್ಚಿ ಬೀಳಿಸಿದೆ.
ಮಚ್ಚಿನ ದಾಳಿಗೆ ಸಿಲುಕಿ ಕತ್ತಿನ ಭಾಗದಲ್ಲಿ ತೀವ್ರ ಗಾಯಗೊಂಡಿರುವ ತನ್ವೀರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಶಸ್ತ್ರಚಿಕಿತ್ಸೆ ನಡೆಸಿ ತುರ್ತು ನಿಗಾ ಘಟಕದಲ್ಲಿ 48 ಗಂಟೆಗಳ ಕಾಲ ನಿಗಾವಹಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ಮಾಡಿದ್ದಾರೆ.
ಈ ನಡುವೆ ಘಟನಾ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದ ಆರೋಪಿಯನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಆರೋಪಿ ಫರ್ಹಾನ್'ನ್ನು ಪೊಲೀಸರು ನ್ಯಾಯಾಲಯಕ್ಕೆ ಸೋಮವಾರ ಹಾಜರುಪಡಿಸಿದ್ದು, ನ್ಯಾಯಾಲಯವು 12 ದಿನಗಳ ಕಾಲ ಆರೋಪಿಯನ್ನು ಪೊಲೀಸರ ವಶಕ್ಕೆ ನೀಡಿದೆ.
ದಾಳಿಕೆ ಪ್ರಮುಖ ಕಾರಣ ತಿಳಿದುಬಂದಿಲ್ಲ. ಪೊಲೀಸರು ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸುತ್ತಿದ್ದಾರೆ. ಆರೋಪಿ ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಸಂಘಟನೆಯ ಸದಸ್ಯನೂ ಆಗಿದ್ದು, ಘಟನೆಯ ಹಿಂದೆ ಯಾವುದಾದರೂ ಸಂಘಟನೆಯ ಪಾತ್ರವಿದೆಯೇ ಎಂಬುದರ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ತನ್ವೀರ್ ಸೇಠ್ ಅವರು ವೈದ್ಯರು ನೀಡುತ್ತಿರುವ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ರಕ್ತದೊತ್ತಡ ನಿಯಂತ್ರಣಕ್ಕೆ ತರಲಾಗಿದೆ. ಕತ್ತಿನ ಭಾಗದಲ್ಲಿ ಗಾಯವಾಗಿರುವುದರಿಂದ ಅವರ ಸ್ಥಿತಿ ಗಂಭೀರವಾಗಿದ್ದು, ಇನ್ನೂ 48 ಗಂಟೆಗಳ ಕಾಲ ಐಸಿಯುನಲ್ಲಿ ವೆಂಟಿಲೇಟರ್ ನಲ್ಲಿ ಇರಿಸಿ ಚಿಕಿತ್ಸೆ ಮುಂದುವರೆಸಲಾಗುತ್ತಿದೆ ಎಂದು ಆಸ್ಪತ್ರೆಯ ಮುಖ್ಯ ಅಧೀಕ್ಷಕ ಡಾ.ಉಪೇಂದ್ರ ಶೆಣೈ ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆ ಪ್ರಕಾರ ಉದ್ಯೋಗ ದೊರಕಿಸಿಕೊಡುವಂತೆ ತನ್ವೀರ್ ಬಳಿ ಆರೋಪಿ ಸಾಕಷ್ಟು ಬಾರಿ ಮನವಿ ಮಾಡಿಕೊಂಡಿದ್ದಾನೆ. ಆದರೂ ಉದ್ಯೋಗ ದೊರಕಿಸಿಕೊಡದ ಹಿನ್ನೆಲೆಯಲ್ಲಿ ದಾಳಿ ನಡೆಸಿದ್ದಾನೆಂದು ಹೇಳಲಾಗುತ್ತಿದೆ.
ಪ್ರಕಱಣ ಸಂಬಂಧ ಹೇಳಿಕೆ ನೀಡಿರುವ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ ಅವರು, ಪ್ರಕರಣ ಸಂಬಂಧ ಇನ್ನೂ ಕೆಲವರನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದಿದ್ದಾರೆ. ಪ್ರಕರಣ ಸಂಬಂಧ ಮತ್ತಷ್ಟು ಮಾಹಿತಿ ನೀಡಲು ಅಧಿಕಾರಿಗಳು ನಿರಾಕರಿಸಿದ್ದಾರೆ.
ಪ್ರಕರಣದಲ್ಲಿ ಸಂಘಟನೆಗಳ ಕೈವಾಡವಿರುವ ಕುರಿತು ಯಾವುದೇ ರೀತಿಯ ಸ್ಪಷ್ಟ ಹೇಳಿಕೆಗಳನ್ನು ನೀಡಲು ಸಾಧ್ಯವಿಲ್ಲ. 2016ರಲ್ಲಿ ಬಿಜೆಪಿ ನಾಯಕ ರಾಜು ಅವರ ಮೇಲೆ ನಡೆದ ದಾಳಿಯಂತೆಯೇ ಈ ಪ್ರಕರಣ ಕೂಡ ನಡೆದಿದೆಯೇ ಎಂಬ ಪ್ರಶ್ನೆಗೆ ಈ ಆಯಾಮದಲ್ಲಿಯೂ ತನಿಖೆ ನಡೆಸಲಾಗುತ್ತಿದೆ ಎಂದಿದ್ದಾರೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತನ್ವೀರ್ ಅವರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ವಿ.ಸೋಮಣ್ಣ, ಸಂಸದ ಪ್ರತಾಪ್ ಸಿಂಹ, ಮಾಜಿ ಸಚಿವ ಯುಟಿ ಖಾದರ್, ಮಾಜಿ ಸಂಸದ ಆರ್.ಧ್ರುವ ನಾರಾಯಣ್ ಸೇರಿದಂತೆ ಹಲವು ಗಣ್ಯರು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಮೈಸೂರು ನಗರದ ಬನ್ನಿ ಮಂಟಪದ ಮೈದಾನದಲ್ಲಿ ಭಾನುವಾರ ರಾತ್ರಿ ನಡೆದ ವಿವಾಹ ಆರತಕ್ಷತೆಯಲ್ಲಿ ಭಾಗವಹಿಸಿದ್ದ ತನ್ವೀರ್ ಸೇಠ್ ಅವರು, ಅಲ್ಲಿ ಏರ್ಪಡಿಸಿದ್ದ ಗಾಯನ ಕಾರ್ಯಕ್ರಮವನ್ನು ಮೊದಲ ಸಾಲಿನಲ್ಲಿ ಕುಳಿತು ಕೇಳುತ್ತಿದ್ದರು. ಈ ವೇಳೆ ಅಲ್ಲಿಗೆ ಏಕಾಏಕಿ ಬಂದ ಗೌಸಿಯಾನಗರದ ಫರ್ಹಾನ್ (24) ಎಂಬಾತ ಮಚ್ಚಿನಿಂದ ತನ್ವೀರ್ ಅವರ ಕುತ್ತಿಗೆ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ್ದಾನೆ. ಕೂಡಲೇ ಗಾಯಾಳು ತನ್ವೀರ್ ಅವರನ್ನು ಪೊಲೀಸರ ವಾಹನದಲ್ಲಿ ಮೈಸೂರು-ಬೆಂಗಳೂರು ರಸ್ತೆಯಲ್ಲಿರುವ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮಚ್ಚಿನೇಟಿಗೆ ತನ್ವೀರ್ ಸೇಠ್ ಅವರಿಗೆ ಕತ್ತಿನ ಭಾಗದಲ್ಲಿ ಆಳವಾದ ಗಾಯವಾಗಿದ್ದು, ತೀವ್ರವಾಗಿ ರಕ್ತಸ್ರಾವವಾಗಿದೆ. 2 ಗಂಟೆಗೂ ಹೆಚ್ಚು ಕಾಲ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರು, ರಕ್ತ ಸೋರಿಕೆ ನಿಯಂತ್ರಿಸಿದ್ದಾರೆ. ಕುತ್ತಿಗೆ ನರ ಮತ್ತು ಇತರೆ ಅಂಗಾಗಗಳಿಗೆ ಗಾಯವಾಗಿದ್ದು ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ.
Advertisement