ಮಂಗಳೂರು: ಬೆಂಗಳೂರ, ಚಿಕ್ಕಮಗಳೂರನ್ನು ಮಂಗಳೂರಿಗೆ ಸಂಪರ್ಕಿಸುವ ರಸ್ತೆಗಳಲ್ಲಿ ಒಂದಾಗಿರುವ ಚಾರ್ಮಾಡಿ ಘಾಟ್ನಲ್ಲಿ ದಿನದ 24 ಗಂಟೆಯೂ ಲಘು ವಾಹನ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಆದರೆ ಭಾರೀ ವಾಹನಗಳ ಸಂಚಾರ ನಿಷೇಧ ಮುಂದುವರಿಸಲಾಗಿದೆ.
ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಲಘು ವಾಹನಗಳಿಗೆ ನ.28ರಿಂದ ದಿನದ 24 ಗಂಟೆಯೂ ಮುಕ್ತ ಪ್ರವೇಶವಿದೆ. ಆದರೆ ಎಲ್ಲ ರೀತಿಯ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಈ ಆದೇಶವು ಮುಂದಿನ ಆದೇಶದವರೆಗೆ ಜಾರಿಯಲ್ಲಿರುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಬುಧವಾರ ಆದೇಶ ಹೊರಡಿಸಿದ್ದಾರೆ.
ಚಾರ್ಮಾಡಿ ಘಾಟ್ನಲ್ಲಿ ನಿರಂತರವಾಗಿ ಸುರಿದ ಭಾರೀ ಮಳೆಗೆ ರಸ್ತೆಗಳು ಸಂಪೂರ್ಣ ಹಾಳಾಗಿದ್ದವು. ರಾಷ್ಟ್ರೀಯ ಹೆದ್ದಾರಿ 73ರ ಮಂಗಳೂರು-ವಿಲ್ಲಪುರಂ ರಸ್ತೆಯ 76 ಕಿ.ಮೀ.ನಿಂದ 86 ಕಿ.ಮೀ.ವರೆಗಿನ ರಸ್ತೆಯ ಮಾರ್ಗದಲ್ಲಿ ಎಲ್ಲ ರೀತಿಯ ವಾಹನಗಳ ಸಂಚಾರವನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಸೆ.15ರಿಂದ ಲಘು ವಾಹನಗಳಿಗೆ ಮಾತ್ರ ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಸಂಚಾರಕ್ಕೆ ಅವಕಾಶ ಕಲ್ಪಿಸಿ ಕೊಡಲಾಗಿತ್ತು. ಇದೀಗ ಈ ಆದೇಶವನ್ನು ಮಾರ್ಪಾಡಿಸಿರುವ ಜಿಲ್ಲಾಧಿಕಾರಿ, ಲಘು ವಾಹನಗಳಿಗೆ 24 ಗಂಟೆಯೂ ಸಂಚಾರಕ್ಕೆ ಮುಕ್ತಗೊಳಿಸಿದ್ದರೆ, ಭಾರೀ ವಾಹನಗಳ ಸಂಚಾರದ ನಿಷೇಧವನ್ನು ಮುಂದುವರಿಸಿದ್ದಾರೆ.
Advertisement