ಮೈಸೂರು: ನ್ಯಾಯ ಬೆಲೆ ಅಂಗಡಿಯಲ್ಲಿ ಜಾತಿ ಆಧಾರದ ಮೇಲೆ ತಾರತಮ್ಯ ಮಾಡಲಾಗಿದೆ ಎಂದು ಕಾಡಕೋಳ ಕೈಗಾರಿಕಾ ಪ್ರದೇಶದಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಪಂಗಡದ ಕುಟುಂಬವೊಂದು ಆರೋಪಿಸಿದೆ.
ಪಡಿತರ ಪಡೆದುಕೊಳ್ಳಲು ಹೋಗಿದ್ದ ಸಂದರ್ಭದಲ್ಲಿ ಲಿಂಗಾಯಿತ ಸಮುದಾಯಕ್ಕೆ ಸೇರಿರುವ ನ್ಯಾಯ ಬೆಲೆ ಅಂಗಡಿ ಮಾಲೀಕ ಭರತ್ ಅಮಾನವೀಯವಾಗಿ ವರ್ತಿಸಿದ್ದಾನೆ ಎಂದು ಅವರು ಆಪಾದಿಸಿದ್ದಾರೆ.
ಪರಿಶಿಷ್ಟ ಪಂಗಡಕ್ಕೆ ಸೇರಿರುವ ರಂಗಸ್ವಾಮಿ ಮೇಲೆ ಮೇಲ್ವರ್ಗದ ಜನರು ಹಲ್ಲೆ ನಡೆಸಿದ್ದಾರೆ. ಪಡಿತರ ಅಂಗಡಿಯಲ್ಲಿ ಪಿಂಗರ್ ಪ್ರಿಂಟ್ ಒತ್ತಲು ಹೋದ ಸಂದರ್ಭದಲ್ಲಿ ಮೇಲ್ವರ್ಗಕ್ಕೆ ಸೇರಿದ ಕೆಲವರು ಬೈಕ್ ಪಾರ್ಕಿಂಗ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಜಗಳ ತೆಗೆದು ಹಲ್ಲೆ ನಡೆಸಿದ್ದಾರೆ ಎಂದು ತಿಳಿಸಿರುವುದಾಗಿ ಪರಿಶಿಷ್ಟ ಪಂಗಡಕ್ಕೆ ಸೇರಿರುವ ಸ್ಥಳೀಯ ಯುವಕ ಪ್ರಕಾಶ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಈ ಸಂಬಂಧ ವರುಣಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶಾಸಕ ಯತೀಂದ್ರ ಸಿದ್ದರಾಮಯ್ಯ ಹಾಗೂ ಆಹಾರ ಮತ್ತು ನಾಗರಿಕ ಪೂರೈಕೆ ಅಧಿಕಾರಿಗಳ ಗಮನಕ್ಕೂ ತಂದಿದ್ದಾರೆ. ಹಲ್ಲೆ ನಡೆಸಿದವರ ವಿರುದ್ದ ಕ್ರಮ ತೆಗೆದುಕೊಳ್ಳಬೇಕು ಹಾಗೂ ನಮ್ಮಗಾಗಿ ಪ್ರತ್ಯೇಕ ನ್ಯಾಯ ಬೆಲೆ ಅಂಗಡಿ ತೆರೆಯಬೇಕೆಂದು ಸಮುದಾಯದ ಮುಖಂಡ ಕೃಷ್ಣ ನಾಯಕ್ ಆಗ್ರಹಿಸಿದ್ದಾರೆ.
Advertisement