ಬೆಂಗಳೂರು: ಯಲಹಂಕದ ಏರೋ ಇಂಡಿಯಾ ಡೊಮೆಸ್ಟಿಕ್ ಪಾರ್ಕಿಂಗ್ ಪ್ರದೇಶದಲ್ಲಿ ಸಂಭವಿಸಿದ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಂಗಳವಾರ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ಪ್ರಕರಣದ ತನಿಖೆಯನ್ನು ನ್ಯಾಯಾಂಗ ತನಿಖೆಗೆ ಹಸ್ತಾಂತರಿಸಲು ನಿರ್ದೇಶಿಸಲು ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ರಕ್ಷಣಾ ಇಲಾಖೆ, ಹೆಚ್ಎಎಲ್, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ನಗರದ ನಿವಾಸಿ ನಿವೃತ್ತ ವಿಂಗ್ ಕಮಾಂಡರ್ ಬಿ.ಬಿ.ಅತ್ರಿ, ವಕೀಲೆ ಗೀತಾ ಮಿಶ್ರಾ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ವಿಚಾರಣೆಯನ್ನು ನ್ಯಾಯಮೂರ್ತಿ ಹೆಚ್.ಟಿ.ನರೇಂದ್ರ ಪ್ರಸಾದ್ ನೇತೃತ್ವದ ದಸರಾ ರಜಾಕಾಲದ ವಿಭಾಗೀಯ ನ್ಯಾಯಪೀಠ ನಡೆಸಿತು.
ಕಳೆದ ಫೆ.23ರಂದು ಬೆಂಗಳೂರು ಏರ್ ಶೋ ಕಾರ್ಯಕ್ರಮದ ವೇಳೆ ಅಗ್ನಿ ಅವಘಟ ಸಂಭವಿಸಿ ಸುಮಾರು 400ಕ್ಕೂ ಹೆಚ್ಚು ಕಾರುಗಳು ಸುಟ್ಟು ಭಸ್ಮಗೊಂಡಿದ್ದವು. ಯಾರೋ ಕಿಡಿಗೇಡಿಗಳು ಧೂಮಪಾನ ಮಾಡಿ ಕಡ್ಡಿ ಬಿಸಾಕಿದ್ದರಿಂದಾಗಿ ಅದು ಒಣ ಹುಲ್ಲಿನ ಮೇಲೆ ಬಿದ್ದು ಬೆಂಕಿ ಹೊತ್ತುಕೊಂಡಿದೆ ಎಂದು ಹೇಳಲಾಗುತ್ತಿತ್ತು. ಆದರೆ, ಈ ಬಗ್ಗೆ ಯಾವುದೇ ರೀತಿಯ ನಿಖರ ಕಾರಣಗಳು ತಿಳಿದು ಬಂದಿರಲಿಲ್ಲ.
Advertisement