ಬೆಂಗಳೂರು: ನಿಮ್ಮ ಅಸಾಮರ್ಥ್ಯಕ್ಕಾಗಿ ರಾಜ್ಯದ ಜನರನ್ನು ಶಿಕ್ಷಿಸಬೇಡಿ, ದಯವಿಟ್ಟು ರಾಜೀನಾಮೆ ಕೊಟ್ಟು ಹೊರಟುಬಿಡಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಶುಕ್ರವಾರ ಹೇಳಿದ್ದಾರೆ.
ಕೇಂದ್ರದಿಂದ ನೆರೆ ಪರಿಹಾರ ತರುವಲ್ಲಿ ವಿಫಲಾಗಿರುವ ರಾಜ್ಯ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಕಿಡಿಕಾರಿರುವ ಸಿದ್ದರಾಮಯ್ಯ ಅವರು, ನಿಮ್ಮ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಒಪ್ಪಿಕೊಂಡ ಬಳಿಕ ಒಂದು ಕ್ಷಣ ಕೂಡ ಅಧಿಕಾರದಲ್ಲಿ ಮುಂದುವರೆಯುವ ಅರ್ಹತೆ ನಿಮಗಿಲ್ಲ. ದಯವಿಟ್ಟು ರಾಜೀನಾಮೆ ಕೊಟ್ಟು ಹೊರಟುಬಿಡಿ. ನಿಮ್ಮ ಅಸಾಮರ್ಥ್ಯಕ್ಕಾಗಿ ರಾಜ್ಯದ ಜನರನ್ನು ಶಿಕ್ಷಿಸಬೇಡಿ ಎಂದು ಹೇಳಿದ್ದಾರೆ.
ಮತ್ತೊಂದು ಟ್ವೀಟ್ ನಲ್ಲಿ ಬಿಎಸ್'ವೈ ಬಿಜೆಪಿಯವರೇ, ನಿಮ್ಮ ಜಗಳದಲ್ಲಿ ಕರ್ನಾಟಕವನ್ನು ಯಾಕೆ ಬಲಿಕೊಡುತ್ತೀರಿ? ನೆರೆ ಸಂತ್ರಸ್ತರಿಗೆ ಪರಿಹಾರ ಕೊಡುವ ಯೋಗ್ಯತೆ ಪ್ರಧಾನಿ ಮೋದಿ ಸರ್ಕಾರಕ್ಕಿಲ್ಲ. ನ್ಯಾಯಬದ್ಧ ಪರಿಹಾರ ಕೇಳಿ ವರದಿ ಸಲ್ಲಿಸುವ ಯೋಗ್ಯತೆ ನಿಮಗೂ ಇಲ್ಲ. ಆರ್ಥಿಕವಾಗಿ ಮಾತ್ರವಲ್ಲ, ಬೌದ್ಧಿಕವಾಗಿಯೂ ನಿಮ್ಮ ಸರ್ಕಾರ ದಿವಾಳಿಯಾಗಿದೆ ಎಂದು ತಿಳಿಸಿದ್ದಾರೆ.
Advertisement